ಕೊಡಗು : ವಿರಾಜಪೇಟೆ-ಅಮ್ಮತ್ತಿ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರನೋರ್ವ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ನಿನ್ನೆ ರಾತ್ರಿ ಸುಮಾರು 8 ಗಂಟೆ ವೇಳೆ ಬಿಳುಗುಂದ ಗ್ರಾಮದ ವಾಸು ಅವರ ಪುತ್ರ ಪ್ರಗತ್ ಹಾಗೂ ತಂಗಪ್ಪ ಅವರು ಸ್ಕೂಟಿಯಲ್ಲಿ ಅಮ್ಮತ್ತಿ ಕಡೆಗೆ ತೆರಳುತ್ತಿದ್ದ ವೇಳೆ, ಸಿದ್ದಾಪುರದಿಂದ ವಿರಾಜಪೇಟೆ ಕಡೆಗೆ ಬರುತ್ತಿದ್ದ ಮಾರುತಿ ವ್ಯಾನ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ವ್ಯಾನ್ ಮಗುಚಿಕೊಂಡಿದ್ದು, ಸ್ಕೂಟಿ ಸಂಪೂರ್ಣ ಜಖಂಗೊಂಡಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಪ್ರಗತ್ ಅವರನ್ನು ತಕ್ಷಣ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.


