ಚಾಮರಾಜನಗರ : ಕಾವೇರಿ ವನ್ಯಜೀವಿಧಾಮದ ಮರಿಯಮಂಗಲ ಬೀಟ್ನಲ್ಲಿ ಅರಣ್ಯ ಸಿಬ್ಬಂದಿ ಹಾಗೂ ಶಂಕಿತ ಕಳ್ಳಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ.





ಹನೂರು ತಾಲೂಕಿನ ಶಾಗ್ಯ ಗ್ರಾಮದ ಸಮೀಪದ ಮರಿಯಮಂಗಲ ಬೀಟ್ನಲ್ಲಿ ಘಟನೆ ನಡೆದಿದೆ. ತೋಮಿಯರ್ ಪಾಳ್ಯ ಗ್ರಾಮದ ಅಂತೋಣಿಸ್ವಾಮಿ, ಪೀಟರ್ ಹಾಗೂ ಕುಮಾರ್ ಅಕ್ರಮವಾಗಿ ಅರಣ್ಯ ಪ್ರವೇಶಿಸಿದ್ದರು ಎನ್ನಲಾಗಿದ್ದು, ಅವರು ವನ್ಯಜೀವಿಗಳ ಕಳ್ಳಬೇಟೆಯಲ್ಲಿ ತೊಡಗಿದ್ದರು ಎಂದು ಅರಣ್ಯ ಇಲಾಖೆ ಶಂಕಿಸಿದೆ.
ಕರ್ತವ್ಯದಲ್ಲಿದ್ದ ಅರಣ್ಯ ಸಿಬ್ಬಂದಿ ಹಾಗೂ ಶಂಕಿತ ಕಳ್ಳಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತದೇಹಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.
ಅರಣ್ಯ ಕಚೇರಿ ಮುಂದೆ ಪ್ರತಿಭಟನೆ
ಘಟನೆಯ ಬಳಿಕ ಮೃತರ ಕುಟುಂಬಸ್ಥರು ಹಾಗೂ ಸಂಬಂಧಿಕರು ಕಾವೇರಿ ವನ್ಯಜೀವಿಧಾಮದ ಅರಣ್ಯ ಕಚೇರಿ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು. ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕುಟುಂಬಸ್ಥರು, ಕಣ್ಣೀರಿಡುತ್ತಾ ನ್ಯಾಯಕ್ಕಾಗಿ ಆಗ್ರಹಿಸಿದರು.
ಈ ವೇಳೆ ಕೆಲವರು ಎಪಿಸಿ ಕ್ಯಾಂಪ್ಗೆ ನುಗ್ಗಿ ದಾಳಿ ನಡೆಸಿದ್ದಾರೆ ಎನ್ನಲಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಸ್ಥಳದಲ್ಲಿ ಗಲಾಟೆ ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಕೊಳ್ಳೇಗಾಲ ಡಿವೈಎಸ್ಪಿ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಮಂಡ್ಯ ಸೇರಿದಂತೆ ವಿವಿಧೆಡೆಯಿಂದಲೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಹಾಗೂ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದು, ಗುಂಡಿನ ಚಕಮಕಿಗೆ ಕಾರಣವೇನು ಮತ್ತು ಘಟನೆಯ ಸಂಪೂರ್ಣ ಹಿನ್ನೆಲೆ ಏನು ಎಂಬುದರ ಕುರಿತು ಪರಿಶೀಲನೆ ಮುಂದುವರಿದಿದೆ.

