ಚಿಕ್ಕಮಗಳೂರು : ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಚಂದ್ರದ್ರೋಣ ಪರ್ವತ ಸಾಲಿನ ಕವಿಕಲ್ ಗಂಡಿ ಬಳಿ ಮತ್ತೆ ಭೂಕುಸಿತ ಸಂಭವಿಸಿದೆ. ನಿನ್ನೆಯಷ್ಟೇ ಕುಸಿದಿದ್ದ ಮಣ್ಣನ್ನು ತೆರವುಗೊಳಿಸಲಾಗಿದ್ದರೂ, ಅದೇ ಸ್ಥಳದಲ್ಲಿ ಮತ್ತೊಮ್ಮೆ ಗುಡ್ಡ ಕುಸಿಯುತ್ತಿದ್ದು ಆತಂಕದ ವಾತಾವರಣ ನಿರ್ಮಾಣವಾಗಿದೆ.

ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಸುಮಾರು 30 ಅಡಿ ಎತ್ತರದಿಂದ ಗುಡ್ಡ ಜರಿಯಲಾರಂಭಿಸಿದೆ. ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸುತ್ತಿದ್ದಂತೆಯೇ ಮತ್ತೆ ಮಣ್ಣು ಕುಸಿಯುತ್ತಿರುವ ದೃಶ್ಯ ಸ್ಥಳದಲ್ಲಿದೆ. ಇಷ್ಟೊಂದು ಅಪಾಯದ ಪರಿಸ್ಥಿತಿಯ ನಡುವೆಯೂ ಕವಿಕಲ್ ಗಂಡಿ ಮಾರ್ಗದಲ್ಲಿ ಪ್ರವಾಸಿಗರ ವಾಹನಗಳ ಸಂಚಾರ ಮುಂದುವರಿದಿದೆ.
ಯಾವುದೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದೆ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿರುವ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯ ವಿರುದ್ಧ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಭೂಕುಸಿತದ ಭೀತಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಕವಿಕಲ್ ಗಂಡಿ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಪ್ರವಾಸಿಗರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.


