ಮಂಗಳೂರು ; ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಾಗಾರಿ ಆರಂಭಗೊಂಡು ಹಲವು ವರ್ಷವಾದ್ರೂ ಇನ್ನೂ ಕೂಡಾ ಪೂರ್ಣಗೊಂಡಿಲ್ಲ. ಕೆಲವಡೆ ಸಂಚಾರಕ್ಕೆ ಯೋಗ್ಯವಾದ ರಸ್ತೆ ಏನೋ ನಿರ್ಮಾಣ ಮಾಡಲಾಗಿದೆಯಾದರೂ ಮಳೆಗಾಲದಲ್ಲಿ ನೀರು ಹರಿದು ಹೋಗುವ ವ್ಯವಸ್ಥೆಯೇ ಮಾಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಕಳೆದ ವರ್ಷ ಇದೇ ಸಮಸ್ಯೆಯಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಸಾಕಷ್ಟು ಸಮಸ್ಯೆ ಅನುಭವಿಸಿದ್ದು ಇದೀಗ ಮಳೆಗಾಲ ಸಮೀಪಿಸುತ್ತ ಇದ್ದು , ಅಕಾಲಿಕ ಮಳೆ ಕೂಡಾ ಆರಂಭವಾಗಿದೆ. ಭಾನುವಾರ ಬಂಟ್ವಾಳ ತಾಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿದಿದ್ದು, ಮತ್ತೆ ಹೆದ್ದಾರಿ ಪ್ರಯಾಣಿಕರಿಗೆ ಸಂಕಷ್ಟ ತಂದೊಡ್ಡಿದೆ. ಮಳೆಯಿಂದಾಗಿ ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ವಾಹನ ಸವಾರರು ಪರದಾಡಿದ್ದಾರೆ. ಬಂಟ್ವಾಳ ತಾಲೂಕಿ ಕಲ್ಲಡ್ಕ ಸಮೀಪದ ಸೂರಿಕುಮೇರು ಎಂಬಲ್ಲಿ ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ಇಡೀ ರಸ್ತೆಯೇ ನದಿಯಂತಾಗಿದೆ. ಇದರ ನಡುವೆ ಸಣ್ಣಪುಟ್ಟ ವಾಹನಗಳು ಸಂಚರಿಸಲು ಅಸಾಧ್ಯವಾದ ಸ್ಥಿತಿ ನಿರ್ಮಾಣವಾಗಿದ್ದು, ವಾಹನ ಸವಾರರು ಹೆದ್ದಾರಿ ಕಾಮಗಾರಿಗೆ ಹಿಡಿ ಶಾಪ ಹಾಕಿದ್ದಾರೆ.
ಈ ಬಗ್ಗೆ ಸಂಸದ ಕ್ಯಾ. ಬ್ರಿಜೇಶ್ ಚೌಟರವರಿಗೆ ಹಲವು ಬಾರಿ ಕಾಮಗಾರಿ ವಿಳಂಬ ಬಗ್ಗೆ ಮನವಿ ಮಾಡಿದ್ದಾರೆಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಹೆದ್ದಾರಿಯ ಇಕ್ಕೆಲೆಯಲ್ಲಿ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಮಾಡದೇ ಇರುವುದು ಈ ಅವ್ಯವಸ್ಥೆಗೆ ಕಾರಣವಾಗಿದ್ದು, ತಕ್ಷಣವೇ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.


