ಬೆಂಗಳೂರು : ಬೆಂಗಳೂರಿನ ಇಂದಿರಾನಗರದ ರಾಮೇಶ್ವರಂ ಕೆಫೆಯೊಂದರಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 9 ಜನರು ಗಾಯಗೊಂಡಿದ್ದು ಐವರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ.
ಇದು ಕಡಿಮೆ ತೀವ್ರತೆಯ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಾಂಬ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದೃಢಪಡಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿಯಲ್ಲಿ ವ್ಯಕ್ತಿಯೊಬ್ಬ ಕೆಫೆಯಲ್ಲಿ ಚೀಲವನ್ನು ಬಿಟ್ಟು ಹೋಗುತ್ತಿರುವುದು ಕಂಡುಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ದೃಢಪಡಿಸಿದ್ದಾರೆ.
ಆರಂಭಿಕ ವರದಿಗಳು ಚೀಲದಲ್ಲಿದ್ದ ವಸ್ತುವು ಕೆಫೆಯಲ್ಲಿ ಸ್ಫೋಟಕ್ಕೆ ಕಾರಣವಾಯಿತು ಎಂದು ಸೂಚಿಸಿತ್ತು. ಪರಿಸ್ಥಿತಿಯನ್ನು ಪರಿಶೀಲಿಸಲು ರಾಜ್ಯ ಗೃಹ ಸಚಿವರು ಕೆಫೆಗೆ ತೆರಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು. ತಮ್ಮ ಸರ್ಕಾರದ ಅಡಿಯಲ್ಲಿ ಮೊದಲ ಬಾರಿಗೆ ಸ್ಫೋಟ ಸಂಭವಿಸಿದೆ ಎಂದು ಸಿಎಂ ಹೇಳಿದರು.
ನಗರದ ಪ್ರಸಿದ್ಧ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಒಂಬತ್ತು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಹಠಾತ್ ಸ್ಫೋಟ ಸಂಭವಿಸಿದ್ದು, ಗ್ರಾಹಕರು ಜೀವ ಉಳಿಸಿಕೊಳ್ಳಲು ಹೊರಗೆ ಓಡಿಬಂದಿದ್ದಾರೆ.
ವರದಿಗಳ ಪ್ರಕಾರ, ಕೆಫೆಯಲ್ಲಿ ಚೀಲದಲ್ಲಿ ಇರಿಸಲಾಗಿದ್ದ ನಿಗೂಢ ವಸ್ತು ಸ್ಫೋಟಗೊಂಡಿದೆ. ಘಟನೆಯಲ್ಲಿ ಒಂಬತ್ತು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿದೆ.


