ಮಂಗಳೂರು : ಮಹಿಳೆಯರ ಮೇಲಿನ ದೌರ್ಜನ್ಯ, ಕಿರುಕುಳ, ವಂಚನೆ ಹಾಗೂ ವಿವಿಧ ರೀತಿಯ ಸಂಕಷ್ಟಗಳಿಗೆ ತ್ವರಿತ ನೆರವು ಒದಗಿಸುವ ಉದ್ದೇಶದಿಂದ ವಿಶ್ವ ಹಿಂದೂ ಪರಿಷತ್ ಕರ್ನಾಟಕವು ರಾಜ್ಯಮಟ್ಟದ ‘ಹಿಂದೂ ಮಹಿಳಾ ಸಹಾಯವಾಣಿ’ (88844 37733)ಯನ್ನು ಬೆಂಗಳೂರಿನ ಧರ್ಮಶ್ರೀ ವಿಶ್ವ ಹಿಂದೂ ಪರಿಷತ್ ಕಾರ್ಯಾಲಯದಲ್ಲಿ ಶನಿವಾರ ಅಧಿಕೃತವಾಗಿ ಆರಂಭಿಸಿದೆ.
ಸಹಾಯವಾಣಿಯ ಮೂಲಕ ಪ್ರೀತಿಯ ಹೆಸರಿನಲ್ಲಿ ವಂಚನೆ, ಕೌಟುಂಬಿಕ ಹಿಂಸೆ, ಲೈಂಗಿಕ ಕಿರುಕುಳ, ಸೈಬರ್ ಕಿರುಕುಳ, ಖಾಸಗಿ ಚಿತ್ರಗಳ ದುರ್ಬಳಕೆ, ಬಲವಂತದ ಮತಾಂತರ, ಮಹಿಳೆಯರು ಮತ್ತು ಮಕ್ಕಳ ಕಳ್ಳಸಾಗಣೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವ ಮಹಿಳೆಯರಿಗೆ ಕಾನೂನು, ಮಾನಸಿಕ, ವೈದ್ಯಕೀಯ ಹಾಗೂ ಸಾಮಾಜಿಕ ನೆರವು ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಯೋಜನೆಯಲ್ಲಿ ಮಹಿಳಾ ವಕೀಲರು, ಕ್ರಿಮಿನಲ್ ಹಾಗೂ ಕುಟುಂಬ ಕಾನೂನು ತಜ್ಞರು, ಮನೋವೈದ್ಯರು, ಆಪ್ತ ಸಮಾಲೋಚಕರು, ಸಮಾಜಸೇವಕರು, ವೈದ್ಯರು, ಸೈಬರ್ ಭದ್ರತಾ ತಜ್ಞರು, ಕಾನೂನು ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಕರು ಸೇವೆ ಸಲ್ಲಿಸಲಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಮಹಿಳಾ ಸುರಕ್ಷಾ ಸಮಿತಿಯನ್ನು ರಚಿಸಿ, ಬಂದಿರುವ ದೂರುಗಳನ್ನು ಪರಿಶೀಲಿಸಿ ಅಗತ್ಯ ನೆರವು ಹಾಗೂ ಪುನರ್ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ.
ಸಂಕಷ್ಟದಲ್ಲಿರುವ ಮಹಿಳೆಯರು 88844 37733 ಸಹಾಯವಾಣಿಯನ್ನು ಸಂಪರ್ಕಿಸಿ ಸೇವೆಯ ಪ್ರಯೋಜನ ಪಡೆಯುವಂತೆ ಹಾಗೂ ಸಾರ್ವಜನಿಕರು ಈ ಯೋಜನೆಯ ಬಗ್ಗೆ ವ್ಯಾಪಕವಾಗಿ ಮಾಹಿತಿ ಹಂಚಿಕೊಳ್ಳುವಂತೆ ಮನವಿ ಮಾಡಲಾಗಿದೆ.


