ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಭೀರೇಶ್ವರ ಮತ್ತು ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 51 ಜನ ಭಕ್ತರು ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ.
ಗ್ರಾಮದಲ್ಲಿ ನಡೆದಿದ್ದ ಜಾತ್ರೆಯಲ್ಲಿ ಅನ್ನ ಪ್ರಸಾದ ಮತ್ತು ಮಾವಿನ ಹಣ್ಣಿನ ಶಿಖರಣಿ ಸೇವಿಸಿದ್ದ ಗ್ರಾಮಸ್ಥರಿಗೆ ಏಕಾಏಕಿ ವಾಂತಿ-ಭೇದಿ ಶುರುವಾಗಿದ್ದು ಕೂಡಲೇ ಅಸ್ತವ್ಯಸ್ಥಗೊಂಡವರಿಗೆ ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ.
ಇವರಲ್ಲಿ ಐವರ ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಗ್ರಾಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಬೀಡುಬಿಟ್ಟಿದ್ದು ಅಹಿತಕರ ಘಟನೆ ನಡೆಯದಂತೆ ಗ್ರಾಮದಲ್ಲಿ ಕ್ಯಾಂಪ್ ತೆರೆದು ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಮಾಹಿತಿ ಸಿಗುತ್ತಿದ್ದಂತೆ ಆಸ್ಪತ್ರೆಗೆ ದೌಡಾಯಿಸಿದ ಸ್ಥಳೀಯ ಕಾಂಗ್ರೆಸ್ ಶಾಸಕ ವಿಶ್ವಾಸ್ ವೈದ್ಯ ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ.


