ಬೈಲಹೊಂಗಲ : ‘ಭಾರತವನ್ನು ಕಟ್ಟುವ ಸಾಮರ್ಥ್ಯ ಭಗವದ್ಗೀತೆಗೆ ಇದೆ ಹೊರತು ಬೇರೆ ಯಾವುದಕ್ಕೂ ಇಲ್ಲ’ ಎಂದು ಶಿರಸಿ ಸ್ವರ್ಣವಲ್ಲೀ ಮಹಾಸಂಸ್ಥಾನದ ಮಠಾಧೀಶ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು.
ಬೈಲಹೊಂಗಲ ಪಟ್ಟಣದ ಶಿವಬಸವ ಕಲ್ಯಾಣ ಮಂಟಪದಲ್ಲಿ ಶಿರಸಿಯ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಶಿಕ್ಷಣ ಸಂಸ್ಥೆಯ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಭಗವದ್ಗೀತಾ ಅಭಿಯಾನ ಸಮಿತಿ ವತಿಯಿಂದ ನಡೆದ ‘ಭಗವದ್ಗೀತಾ ಅಭಿಯಾನ’ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.
‘ಸಮಾಜದಲ್ಲಿ ಸಾಮಾಜಿಕ ಸಾಮರಸ್ಯ, ರಾಷ್ಟ್ರೀಯ ಭಾವೈಕ್ಯತೆ, ವ್ಯಕ್ತಿತ್ವ ವಿಕಸನ ಮೂಡಿಸುವುದೇ ಭಗವದ್ಗೀತಾ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ವಿಶ್ವಮಾನ್ಯ ಭಗವದ್ಗೀತೆಯ ಬಗ್ಗೆ ನಮ್ಮವರೇ ನಾವೇ ಅನೇಕರು ಅದನ್ನು ತಿಳಿದುಕೊಂಡಿಲ್ಲ. ಅದಕ್ಕಾಗಿ ರಾಜ್ಯಾದ್ಯಂತ ಆಭಿಯಾನ ನಡೆಸಲಾಗುತ್ತಿದೆ’ ಎಂದರು.
ಮೂರುಸಾವಿರಮಠದ ಪ್ರಭುನೀಲಕಂಠ ಸ್ವಾಮೀಜಿ ಆಶೀರ್ವದಿಸಿದರು.
ಶಾಸಕ ಮಹಾಂತೇಶ ಕೌಜಲಗಿ, ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ, ವಿಶ್ವಹಿಂದು ಪರಿಷದ್ ಜಿಲ್ಲಾ ಉಪಾಧ್ಯಕ್ಷ ಪ್ರಮೋದಕುಮಾರ ವಕ್ಕುಂದಮಠ, ಕೆಎಲ್ಇ ಉಪಾಧ್ಯಕ್ಷ ಬಸವರಾಜ ತಟವಟಿ, ಶಿಕ್ಷಣ ಪ್ರೇಮಿ ಬಿ.ಬಿ.ಗಣಾಚಾರಿ, ಡಾ.ಮನೋಜ ಗಾಣೇಕರ, ಸಾರ್ವಜನಿಕರು ಪಾಲ್ಗೊಂಡಿದ್ದರು.
ಪ್ರಾಚಾರ್ಯ ಎಂ.ಸಿ.ಬಿರಾದಾರ ಸ್ವಾಗತಿಸಿದರು. ವಿದ್ಯಾರ್ಥಿನೀಯರು ಪ್ರಾರ್ಥಿಸಿದರು. ಸುಬ್ರಮಣ್ಯ ಭಟ್ ನಿರೂಪಿಸಿದರು. ಮುಕುಂದ ಕುಲಕರ್ಣಿ ವಂದಿಸಿದರು.


