ಮಂಗಳೂರು : 17 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಏಪ್ರಿಲ್ 23ರಂದು ಸಂಜೆ ಸುಮಾರು 4 ಗಂಟೆಯ ವೇಳೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತ ಬಾಲಕಿ ಆತ್ಮಹತ್ಯೆಗೂ ಮುನ್ನ ಪೋಷಕರಿಗೆ ಉದ್ದೇಶಿಸಿ ಪತ್ರ ಬರೆದಿದ್ದು, ತಾನು ತಪ್ಪು ಮಾಡಿರುವುದಾಗಿ ಹಾಗೂ “ಅವನು ಸಂತೋಷವಾಗಿದ್ದಾನೆ” ಎಂದು ಉಲ್ಲೇಖಿಸಿದ್ದಾಳೆ ಎನ್ನಲಾಗಿದೆ. ಅಲ್ಲದೆ, ಕೆಲವು ಹಿಂದೂ ಸಂಘಟನೆಗಳು ತನ್ನ ನೆರವಿಗೆ ಬಂದಿಲ್ಲ ಎಂಬ ಅಂಶವೂ ಪತ್ರದಲ್ಲಿ ಉಲ್ಲೇಖವಾಗಿದೆ ಎಂದು ತಿಳಿದುಬಂದಿದೆ.
ಬಾಲಕಿಯ ಪೋಷಕರು ರಾತ್ರಿ ಸುಮಾರು 11 ಗಂಟೆಗೆ ಪೊಲೀಸರಿಗೆ ದೂರು ನೀಡಿದ್ದು, ತಮ್ಮ ಮಗಳು ಗರ್ಭಿಣಿಯಾಗಿದ್ದಳು ಹಾಗೂ ಆಕೆಯ ಆತ್ಮಹತ್ಯೆಗೆ ಅನೀಶ್ ಪೂಜಾರಿ ಎಂಬಾತ ಕಾರಣ ಎಂದು ಆರೋಪಿಸಿದ್ದಾರೆ.
ದೂರಿನ ಆಧಾರದ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅನೀಶ್ ಪೂಜಾರಿ ವಿರುದ್ಧ ಪೋಕ್ಸೊ ಕಾಯ್ದೆ, ಅತ್ಯಾಚಾರ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಗಳಡಿ ಮುಂಜಾನೆ 1 ಗಂಟೆ ಸುಮಾರಿಗೆ ಎಫ್ಐಆರ್ ದಾಖಲಿಸಲಾಗಿದೆ.
ಮೃತದೇಹದ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಡಿಎನ್ಎ ಪರೀಕ್ಷೆಗಾಗಿ ಭ್ರೂಣವನ್ನು ವೈದ್ಯರು ಸಂಗ್ರಹಿಸಿದ್ದಾರೆ. ಆರೋಪಿಯನ್ನು ಬಂಧಿಸಲು ವಿಶೇಷ ಪೊಲೀಸ್ ತಂಡವನ್ನು ನಿಯೋಜಿಸಲಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ಪ್ರಕರಣದ ಕುರಿತು ಸುರತ್ಕಲ್ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.




