ಮಂಗಳೂರು : ಜಪ್ಪಿನಮೊಗರು ಕಡೆಕಾರು ಶ್ರೀ ಮಲ್ಲಿಕಾರ್ಜುನ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಕ್ಕೆ ಬುಧವಾರ ವೈಭವದ ಶಿಲಾನ್ಯಾಸ ನೆರವೇರಿತು. ಬ್ರಹ್ಮಶ್ರೀ ವೇದಮೂರ್ತಿ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಯವರ ವೈದಿಕ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು.

ದೇವಸ್ಥಾನದ ಪುನರ್ನಿರ್ಮಾಣ ಕಾರ್ಯಕ್ಕೆ ಮಾಣಿಲ ಕ್ಷೇತ್ರದಿಂದ ₹1 ಲಕ್ಷ ದೇಣಿಗೆ ನೀಡುವುದಾಗಿ ಹಾಗೂ ಕರಸೇವೆಗೆ ಸ್ವಯಂಸೇವಕರನ್ನು ಕಳುಹಿಸುವುದಾಗಿ ಸ್ವಾಮೀಜಿ ಘೋಷಿಸಿದರು. ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಅಧ್ಯಕ್ಷತೆ ವಹಿಸಿ, ಸುಮಾರು 10 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಿ ಏಪ್ರಿಲ್ನಲ್ಲಿ ಬ್ರಹ್ಮಕಲಶೋತ್ಸವ ನಡೆಸುವ ಗುರಿ ಹೊಂದಿರುವುದಾಗಿ ತಿಳಿಸಿದರು.
ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಹರಿಪ್ರಸಾದ್ ಜೆ. ಮಾತನಾಡಿ, ಸುಮಾರು 680 ವರ್ಷಗಳ ಇತಿಹಾಸ ಹೊಂದಿರುವ ಈ ಕ್ಷೇತ್ರವನ್ನು ಐದು ಅಡಿ ಎತ್ತರಿಸಿ ಪುನರ್ನಿರ್ಮಿಸುವ ಸಂಕಲ್ಪ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವೀಣಾಮಂಗಳ, ಶಿವಾನಂದ ರಾವ್, ಜೆ. ಜಗದೀಶ್ ರಾವ್, ಜೆ. ಕೊರಗಪ್ಪ, ರಾಧಾಕೃಷ್ಣ, ನವೀನ್ಚಂದ್ರ, ಸುಧೀರ್, ಸಂತೋಷ್, ಪ್ರದೀಪ್ ಪಾಲೆಮಾರ್ ಹಾಗೂ ಪ್ರಸನ್ನ ಪಾಲೆಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

