ಮಂಗಳೂರು : ಕೊಪ್ಪಳಕಾಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಸುಲಿಗೆ ಮಾಡಿದ ಆರೋಪಿಯನ್ನು ಪೋಲಿಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.ಆರೋಪಿಯಿಂದ ಮಹಿಳೆಗೆ ಸೇರಿದ 32 ಗ್ರಾಂ ತೂಕದ ಅಂದಾಜು ಬೆಲೆ 3,50,000/- ರೂ. ಬೆಲೆ ಬಾಳುವ ಚಿನ್ನದ ಕರಿಮಣಿ ಸರ ವಶ ಪಡಿಸಲಾಗಿದೆ.
ಡಿ. 25 ರಂದು ಸಂಜೆ ಗುರುನಗರ ನಿವಾಸಿಯಾದ ಮಹಿಳೆಯೊಬ್ಬರು ತಮ್ಮ ಮಗಳೊಂದಿಗೆ ಯೆಯ್ಯಾಡಿಯಲ್ಲಿರುವ ತಮ್ಮ ಅಂಗಡಿಯಿಂದ ಮನೆಯ ಕಡೆಗೆ ಶಂಕರಭವನ ಹೊಟೇಲ್ ಬಳಿಯ ಕೊಪ್ಪಳಕಾಡು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ, ಸಂಜೆ ಸುಮಾರು 6.30 ಗಂಟೆಗೆ ಹಿಂದಿನಿಂದ ಬಂದ ಓರ್ವ ಅಪರಿಚಿತ ವ್ಯಕ್ತಿ ಏಕಾಏಕಿ ರತ್ನಾವತಿ ಎಂಬ ಕುತ್ತಿಗೆಯಲ್ಲಿದ್ದ 32 ಗ್ರಾಂ ತೂಕದ ಬೆಲೆ ಬಾಳುವ ಚಿನ್ನದ ಕರಿಮಣಿ ಸರವನ್ನು ಕಸಿದುಕೊಂಡು ಓಡಿ ಹೋಗಿದ್ದನು. ಈ ಬಗ್ಗೆ ಅದೇ ದಿನ ಮಂಗಳೂರು ಗ್ರಾಮಾಂತರ ದೂರು ದಾಖಲಾಗಿತ್ತು.
ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಗವಿರಾಜ್ ಮತ್ತು ಶ್ರೀ ಅರುಣ್ ಕುಮಾರ್, ಪಿ.ಎಸ್.ಐ ರವರು, ಠಾಣೆಯ ಕ್ರೈಂ ಸಿಬ್ಬಂದಿಗಳು ಮತ್ತು ಎಸಿಪಿ ದಕ್ಷಿಣ ಉಪವಿಭಾಗದ ಕ್ರೈಂ ಸಿಬ್ಬಂದಿಗಳು ಸೇರಿ ಆರೋಪಿಯ ಪತ್ತೆ ಕಾರ್ಯವನ್ನು ನಡೆಸಿದ್ದು, ಸಾಕ್ಷ್ಯಾಧಾರಗಳ ಮೇಲೆ ಡಿ. 28 ರಂದು ಬೆಳಿಗ್ಗೆ ಸುಮಾರು 9.30 ಗಂಟೆಗೆ ಪ್ರಕರಣದ ಆರೋಪಿ ರೋಹಿತ್ .ಬಿ ದಾಸ್ ಎಂಬಾತನನ್ನು ಬಂಟ್ವಾಳದ ಕುಕ್ಕೆಪದವು ಎಂಬಲ್ಲಿ ಬಂಧಿಸಿದ್ದಾರೆ. ಆರೋಪಿಯಿಂದ 32 ಗ್ರಾಂ ಚಿನ್ನದ ಕರಿಮಣಿ ಸರ ಮೌಲ್ಯ ರೂ.3,50,000/- ಮತ್ತು ಕೃತ್ಯಕ್ಕೆ ಉಪಯೋಗಿಸಿದ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯು ಸ್ವಿಗ್ಗಿ ಮತ್ತು ಝೋಮೆಟೋ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಸ್ಕೂಟರ್ ಖರೀದಿಸಿದ್ದು, ಮತ್ತು ಇತರ ವಿಚಾರಗಳಿಗೆ ಲಕ್ಷಾಂತರ ರೂಪಾಯಿಗಳ ಸಾಲ ಮಾಡಿದ್ದು, ಸಾಲವನ್ನು ತೀರಿಸಲು ಈ ಕೃತ್ಯವನ್ನು ಎಸಗಿರುವುದು ಎಂದು ತನಿಖೆಯಲ್ಲಿ ತಿಳಿದುಬಂದಿದೆ.


