ಮಂಗಳೂರು : ಸಹಕಾರವನ್ನು ಬದುಕಿನ ಧ್ಯೇಯವನ್ನಾಗಿ, ಜನಸೇವೆಯನ್ನು ಪರಮ ಗುರಿಯನ್ನಾಗಿ ಸ್ವೀಕರಿಸಿ ಗ್ರಾಮೀಣ ಸಮಾಜದ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಸಮರ್ಪಿಸಿದ್ದ ಸಹಕಾರ ರಂಗದ ಪಿತಾಮಹ ಮೊಳಹಳ್ಳಿ ಶಿವರಾವ್ ಅವರ ಜೀವನ ಮತ್ತು ಸಾಧನೆಗಳನ್ನು ದಾಖಲಿಸಿರುವ ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಇಂದು ಮಂಗಳೂರಿನಲ್ಲಿ ಬಿಡುಗಡೆಯಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಬ್ಯಾಂಕ್ ಸಭಾಂಗಣದಲ್ಲಿ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
“ಮೊಳಹಳ್ಳಿ ಶಿವರಾವ್ ಅವರು ಎತ್ತಿನಗಾಡಿಯಲ್ಲಿ ಗ್ರಾಮದಿಂದ ಗ್ರಾಮಕ್ಕೆ ಸಂಚರಿಸಿ ಸಹಕಾರಿ ಚಳವಳಿಯನ್ನು ಬೆಳೆಸಿದ ಮಹನೀಯರು. ಕುಂದಾಪುರದ ಮೊಳಹಳ್ಳಿಯಲ್ಲಿ ಜನಿಸಿ, ಪುತ್ತೂರಿನಲ್ಲಿ ವಕೀಲ ವೃತ್ತಿ ನಡೆಸುತ್ತಿದ್ದರೂ ಸಮಾಜದ ಆರ್ಥಿಕ ಹಾಗೂ ಸಾಮಾಜಿಕ ಪ್ರಗತಿಗಾಗಿ ಬದುಕನ್ನೇ ಮುಡಿಪಾಗಿಟ್ಟರು. ಅವರ ಆದರ್ಶಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವನ್ನು ಈ ಕೃತಿ ಮಾಡಲಿದೆ,” ಎಂದು ಅವರು ಹೇಳಿದರು.
ಕೃತಿಯ ಲೇಖಕರಾದ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ಪೇಟೆ ಅವರು ಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯ ಕಿರಿಯ ನಿರೀಕ್ಷಕರಾಗಿದ್ದು, ಕಳೆದ 35 ವರ್ಷಗಳಿಂದ ಕ್ರೀಡಾ ಪತ್ರಿಕೋದ್ಯಮದಲ್ಲಿಯೂ ತಮ್ಮದೇ ಆದ ಗುರುತನ್ನು ಮೂಡಿಸಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಬ್ಯಾಂಕ್ ಸಿಇಒ ಗೋಪಿನಾಥ್ ಭಟ್, ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕ ಶಶಿಕುಮಾರ್ ರೈ ಬಾಳ್ಕೊಟ್ಟು, ನಬಾರ್ಡ್ನ ಸಂಗೀತ, ರಮೇಶ್, ಸುಧೀರ್ ಕುಮಾರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

