ಮಂಗಳೂರು : ಬ್ರಿಜೇಶ್ ಚೌಟ ಅವರು ರಾಷ್ಟ್ರೀಯ ಹೆದ್ದಾರಿ-169ರ ಬನ್ನಡ್ಕ ಪ್ರದೇಶದಲ್ಲಿ ಅಪೂರ್ಣವಾಗಿರುವ ಸರ್ವಿಸ್ ರಸ್ತೆ ಕಾಮಗಾರಿಯನ್ನು ತಕ್ಷಣ ಕೈಗೆತ್ತಿಕೊಳ್ಳುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಬನ್ನಡ್ಕ ಪ್ರದೇಶ ಅಪಘಾತ ವಲಯವಾಗಿ ಗುರುತಿಸಿಕೊಂಡಿದ್ದು, ಸರ್ವಿಸ್ ರಸ್ತೆ ಇಲ್ಲದ ಕಾರಣ ಅಪಘಾತಗಳು, ಸಾವು-ನೋವು ಹಾಗೂ ಸಾರ್ವಜನಿಕರಿಗೆ ತೊಂದರೆಗಳು ಹೆಚ್ಚಾಗುತ್ತಿರುವ ಬಗ್ಗೆ ಸ್ಥಳೀಯರು ಸಂಸದರ ಗಮನಕ್ಕೆ ತಂದಿದ್ದರು.
ಈ ಹಿನ್ನೆಲೆಯಲ್ಲಿ ಸಂಸದ ಬ್ರಿಜೇಶ್ ಚೌಟ ಸ್ಥಳೀಯ ನಿವಾಸಿಗಳು ಹಾಗೂ ಪ್ರಯಾಣಿಕರೊಂದಿಗೆ ಸಭೆ ನಡೆಸಿದ್ದು, ಸುಮಾರು 650ರಿಂದ 700 ಮೀಟರ್ ವರೆಗೆ ಸರ್ವಿಸ್ ರಸ್ತೆ ಸಂಪರ್ಕ ಕಡಿತಗೊಂಡಿರುವುದು ಬೆಳಕಿಗೆ ಬಂದಿದೆ.
ಈ ಸಂಪರ್ಕ ಕೊರತೆಯಿಂದ ಸ್ಥಳೀಯ ವಾಹನ ಸವಾರರು ತಪ್ಪು ದಿಕ್ಕಿನಲ್ಲಿ ಸಂಚರಿಸುವುದು ಹಾಗೂ ವೇಗದ ಮುಖ್ಯ ಹೆದ್ದಾರಿಯನ್ನು ಅಪಾಯಕಾರಿಯಾಗಿ ದಾಟುವುದು ಅನಿವಾರ್ಯವಾಗಿದ್ದು, ಇದರಿಂದ ಅಪಘಾತಗಳು ಮರುಕಳಿಸುತ್ತಿವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳೊಂದಿಗೆ ನಡೆದ ಚರ್ಚೆಯಲ್ಲಿ ಹೆದ್ದಾರಿಯ ಇತರೆ ಭಾಗಗಳಲ್ಲಿ ಸರ್ವಿಸ್ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದರೂ, ಬನ್ನಡ್ಕ ಮಧ್ಯಭಾಗದಲ್ಲಿ ಮಾತ್ರ ಕಾಮಗಾರಿ ಅಪೂರ್ಣವಾಗಿರುವುದು ತಿಳಿದುಬಂದಿದೆ.
ಸಾರ್ವಜನಿಕರ ಸುರಕ್ಷತೆ ಮತ್ತು ಜೀವಹಾನಿ ತಡೆಗಟ್ಟುವ ಉದ್ದೇಶದಿಂದ ಅಪೂರ್ಣವಾಗಿರುವ ಸುಮಾರು 640 ಮೀಟರ್ ಸರ್ವಿಸ್ ರಸ್ತೆ ಕಾಮಗಾರಿಯನ್ನು ತಕ್ಷಣ ಕೈಗೆತ್ತಿಕೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಸಂಸದರು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಈ ಪತ್ರದ ಪ್ರತಿಯನ್ನು ಹೆದ್ದಾರಿ ಪ್ರಾಧಿಕಾರದ ಕರ್ನಾಟಕ ಪ್ರಾದೇಶಿಕ ಅಧಿಕಾರಿ ವಿಲಾಸ್ ಪಿ. ಬ್ರಹ್ಮಾಂಕರ್ ಅವರಿಗೂ ಕಳುಹಿಸಲಾಗಿದೆ.


