ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಸಂಪರ್ಕ ಮಾರ್ಗವಾದ ರಾಷ್ಟ್ರೀಯ ಹೆದ್ದಾರಿ 73ರ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಒಟ್ಟು ₹64 ಕೋಟಿ ಅನುದಾನ ಮಂಜೂರು ಮಾಡಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಸಂಸದರು ನೀಡಿದ ಮಾಹಿತಿಯಂತೆ, ಬಿ.ಸಿ. ರೋಡ್ನಿಂದ ಪುಂಜಾಲಕಟ್ಟೆವರೆಗೆ ಸುಮಾರು 20 ಕಿಮೀ ಉದ್ದದ ಹೆದ್ದಾರಿ ನಿರ್ವಹಣೆ ಕಾಮಗಾರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ₹34.53 ಕೋಟಿ ಅನುದಾನ ಒದಗಿಸಲಾಗಿದೆ.
ಇದಲ್ಲದೆ, ಬಿ.ಸಿ. ರೋಡ್ ಜಂಕ್ಷನ್ನಿಂದ ಬಂಟ್ವಾಳದ ದಿಕ್ಕಿನಲ್ಲಿ ಶ್ರೀ ನಾರಾಯಣಗುರು ಮಂದಿರದವರೆಗಿನ ರಸ್ತೆಯನ್ನು ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ₹22.59 ಕೋಟಿ ಮೀಸಲಿರಿಸಲಾಗಿದೆ. ಹಾಗೆಯೇ, ಬಿ.ಸಿ. ರೋಡ್ ಜಂಕ್ಷನ್ ಹಾಗೂ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ರಸ್ತೆ ನಿರ್ವಹಣಾ ಕಾಮಗಾರಿಗಳಿಗೆ ₹6.92 ಕೋಟಿ ಮಂಜೂರಾಗಿದೆ. ಈ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಜಿಲ್ಲೆಯ ಸಂಚಾರ ವ್ಯವಸ್ಥೆ ಸುಧಾರಣೆಯಾಗಲಿದ್ದು, ವ್ಯಾಪಾರ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ಸಂಸದರು ತಿಳಿಸಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿ ಮೂಲಕ ‘ವಿಕಸಿತ ದಕ್ಷಿಣ ಕನ್ನಡ’ ನಿರ್ಮಾಣಕ್ಕೆ ಇದು ಸಹಾಯಕವಾಗಲಿದೆ ಎಂದಿದ್ದಾರೆ.
ಇದಲ್ಲದೆ, ಉಜಿರೆ–ಧರ್ಮಸ್ಥಳ–ಪೆರಿಯಶಾಂತಿ ಹೆದ್ದಾರಿಯನ್ನು ಸುಮಾರು ₹613.665 ಕೋಟಿ ವೆಚ್ಚದಲ್ಲಿ ದ್ವಿಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಯೂ ಪ್ರಗತಿಯಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ನಿರಂತರ ಅನುದಾನ ದೊರೆಯುತ್ತಿರುವ ಹಿನ್ನೆಲೆಯಲ್ಲಿ ಸಂಸದರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.


