ಮಂಗಳೂರು ; ರಾಜ್ಯ ಸರ್ಕಾರದ ಕಂದಾಯ ಇಲಾಖೆಯು ಯಾವುದೇ ಪೂರ್ವಸಿದ್ಧತೆ ಇಲ್ಲದೇ ದಿನಬೆಳಗಾಗುವುದರೊಳಗೆ ಆಸ್ತಿ ನೋಂದಣಿಗೆ ಇ-ಖಾತಾ ಕಡ್ಡಾಯ ಮಾಡಿದ ನಂತರ ಮಂಗಳೂರು ನಗರ ವ್ಯಾಪ್ತಿಯಲ್ಲಿ ಉಂಟಾಗಿರುವ ಅವ್ಯವಸ್ಥೆಯ ಆಗರದಿಂದಾಗಿ ಸಾರ್ವಜನಿಕರು ದಿನನಿತ್ಯ ಕಚೇರಿಗಳಿಗೆ ಅಲೆದಾಡುವಂತಾಗಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ರವರು ಅಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಈಗಾಗಲೇ ಅಧಿವೇಶನದಲ್ಲೂ ವಿಷಯ ಪ್ರಸ್ತಾಪಿಸಿದ್ದೇನೆ ಮತ್ತು ಮಾನ್ಯ ಕಂದಾಯ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದೇನೆ. ಆದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದ್ದಾರೆ.
ಕಾವೇರಿ 2.0 ತಂತ್ರಾಂಶ ಜೋಡಣೆಯ ನಂತರವಂತೂ ಸಮಸ್ಯೆ ಉಲ್ಬಣವಾಗಿದ್ದು ಯಾವಾಗ ನೋಡಿದರೂ ಸರ್ವರ್ ಡೌನ್, ದಾಖಲೆಗಳು ಅಪ್ಲೋಡ್ ಆಗುತ್ತಿಲ್ಲ ಎಂಬ ಸಿದ್ದ ಉತ್ತರ ಸಿಗುತ್ತಿದೆ. ಮದುವೆ, ಸಾಲ, ಲೋನ್ ಇತ್ಯಾದಿ ಅಗತ್ಯ ಸಂದರ್ಭದಲ್ಲಿ ತಮ್ಮ ಆಸ್ತಿಪಾಸ್ತಿಗಳ ಮೂಲಕ ಹಣವನ್ನು ಹೊಂದಿಸಿಕೊಳ್ಳಲೂ ಸಾಧ್ಯವಾಗದೇ ಜನರು ತೊಂದರೆಗೆ ಒಳಗಾಗುತ್ತಿದ್ದಾರೆ. ಇಂತಹ ನಿಯಮವನ್ನು ಜಾರಿ ಮಾಡುವ ಮೊದಲು ಪ್ರಾಯೋಗಿಕವಾಗಿ ಅನುಷ್ಠಾನಕ್ಕೆ ತಂದು ಬಳಿಕ ಇಡೀ ರಾಜ್ಯದಲ್ಲಿ ಜಾರಿಗೆ ತರಬೇಕಿತ್ತು ಎಂದು ಶಾಸಕರು ಹೇಳಿದ್ದಾರೆ.
ಸರಿಯಾದ ನಿವೇಶನ ನೋಂದಣಿಯಾದರೂ ತಪ್ಪಾದ ನೋಂದಾವಣೆ ಶುಲ್ಕ ಮತ್ತು ಮುದ್ರಾಂಕ ಶುಲ್ಕ ಕಟ್ಟಿರುವ ಸಾರ್ವಜನಿಕರು ದೊಡ್ಡ ರೀತಿಯ ದಾಖಲೆ ಸಮಸ್ಯೆ ಎದುರಿಸಿದ್ದು, ಇವರಿಗೆ ಮುಂದಿನ ದಿನಗಳಲ್ಲಿ ಮಾರಾಟ ಮಾಡಲು ಕಾನೂನಾತ್ಮಕ ಸಮಸ್ಯೆಗಳು ಎದುರಾಗುತ್ತದೆ. ಒಟ್ಟಾಗಿ ಕಂದಾಯ ಇಲಾಖೆಯಲ್ಲಿ ಯಾವುದೇ ಕೆಲಸ ನಡೆಯದೆ ಜನರು ಸಾಕಷ್ಟು ತೊಂದರೆ ಅನುಭವಿಸ್ತಾ ಇದ್ರೂ ಸರ್ಕಾರ ಅದಕ್ಕೊಂದು ಸೂಕ್ತ ಪರಿಹಾರ ಕಲ್ಪಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದ್ದಾರೆ. ಜೊತೆಗೆ ಮಂಗಳೂರು ಮೂಡಾ ಕಚೇರಿಯಲ್ಲಿ ಸಾರ್ವಜನಿಕರ ಪ್ರವೇಶ ನೀಶೇಧ ಮಾಡಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ನಿತೀನ್ ಕುಮಾರ್,ಸಂಜಯ್ ಪ್ರಭು,ರವಿಶಂಕರ್ ಮಿಜಾರ್,ಪ್ರೇಮಾನಂದ ಶೆಟ್ಟಿ,ರಮೇಶ್ ಕಂದೆಟ್ಟು,ಪೂರ್ಣಿಮಾ ಹಾಗೂ ಇನ್ನಿತರು ಉಪಸ್ಥಿತರಿದ್ದರು.


