ಮಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡೆತಡೆ ಉಂಟು ಮಾಡಿದ ಅಪರಿಚಿತ ವ್ಯಕ್ತಿಗಳ ಮೇಲೆ ಐಪಿಸಿ ಕಲಂ 341, 283,143 ಹಾಗೂ 149ರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ನಗರದ ಕಂಕನಾಡಿಯ ಮಸೀದಿಯ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಮಾಡಿದ ಅಪರಿಚಿತರ ಗುಂಪಿನ ವಿರುದ್ಧ ಮಂಗಳೂರು ನಗರ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಾರ್ವಜನಿಕ ದಾರಿಗೆ ಅಡ್ಡಿಪಡಿಸುವುದು, ಕಾನೂನುಬಾಹಿರ ಸಭೆ ಇತ್ಯಾದಿಗಳಿಗೆ ಸಂಬಂಧಿಸಿದ ವಿವಿಧ ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೇ 24ರಂದು ನಡೆದ ಘಟನೆಯ ತನಿಖೆ ನಡೆಯುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿಕೆ ನೀಡಿದ್ದಾರೆ.
ಮಂಗಳೂರು ನಗರದ ಕಂಕನಾಡಿ ರಸ್ತೆಯಲ್ಲಿ ನಮಾಜ್ ಮಾಡಿದ ಪ್ರಕರಣ ಮತ್ತೊಂದು ಧರ್ಮ ದಂಗಲ್ ಆತಂಕ ಮೂಡಿಸಿದೆ. ಒಂದು ಕಡೆ ರಸ್ತೆಗಳಲ್ಲಿ ನಮಾಜ್ ನಿಲ್ಲಿಸದಿದ್ದರೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣದ ಮೂಲಕ ತಡೆಯುತ್ತೇವೆ ಎಂದು ಹಿಂದೂ ಸಂಘಟನೆಗಳು ಹೇಳಿದರೆ, ನಾವೇನು ಕೈಕೊಟ್ಟಿ ಕೂತಿಲ್ಲ ಎಂದು ಎಸ್ಡಿಪಿಐ ವಕ್ತಾರ ರಿಯಾಜ್ ಕಡಂಬು ತಿರುಗೇಟು ನೀಡಿದ್ದಾರೆ. ಈ ಮಧ್ಯೆ ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ಕೇಸ್ ದಾಖಲಿಸಬೇಕು ಎಂದು ಹಿಂದು ಸಂಘಟನೆಗಳು ಆಗ್ರಹಿಸಿದ ಬೆನ್ನಲ್ಲೇ ಪೊಲೀಸರು ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಘಟನೆಯ ವಿಡಿಯೋ ವೈರಲ್ ಆಗಿತ್ತು. ವೀಡಿಯೊದಲ್ಲಿ ಹತ್ತಕ್ಕೂ ಹೆಚ್ಚು ಪುರುಷರು ರಸ್ತೆಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವುದನ್ನು ಕಂಡು ವಾಹನ ಚಾಲಕರು ಯು-ಟರ್ನ್ ತೆಗೆದುಕೊಳ್ಳುವಂತೆ ಮಾಡಿತ್ತು. ಅಲ್ಲದೆ ಘಟನೆ ಕುರಿತು ಕ್ರಮ ಕೈಗೊಳ್ಳುವಂತೆ ವಿಎಚ್ಪಿ ಆಗ್ರಹಿಸಿತ್ತು.ಇದಕ್ಕೂ ಮುನ್ನ ಮಾತನಾಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಮಾಡಿದವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು. ಸಾರ್ವಜನಿಕ ರಸ್ತೆಯಲ್ಲಿ ಜನರು ಪ್ರಾರ್ಥನೆ ಸಲ್ಲಿಸುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, ಹಿಂದೂ ಸಮಾಜ ಎಚ್ಚೆತ್ತುಕೊಂಡಿದ್ದು, ಇಂತಹ ಘಟನೆಗಳ ವಿರುದ್ಧ ಕ್ರಮ ಕೈಗೊಳ್ಳದಿರುವುದು ಗಲಭೆಗೆ ಕಾರಣವಾಗಬಹುದು ಎಂದು ಹೇಳಿದ್ದರು.


