ಮೈಸೂರು : ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ವರ್ಧಂತಿ ಹಬ್ಬದ ಅಂಗವಾಗಿ ಇಂದು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ.




ಬೆಳಗ್ಗೆ 5 ಗಂಟೆಯಿಂದಲೇ ದೇವಿಗೆ ಅಭಿಷೇಕ ಹಾಗೂ ವಿಶೇಷ ಪೂಜೆಗಳು ನೆರವೇರಿದವು. ವರ್ಧಂತಿ ಪ್ರಯುಕ್ತ ದೇವಸ್ಥಾನವನ್ನು ತೆಂಗಿನ ಗರಿ, ಕಬ್ಬು ಹಾಗೂ ವಿವಿಧ ಬಗೆಯ ಹೂವುಗಳಿಂದ ಅದ್ಧೂರಿಯಾಗಿ ಅಲಂಕರಿಸಲಾಗಿದ್ದು, ಭಕ್ತರನ್ನು ಆಕರ್ಷಿಸುವಂತೆ ಸಿಂಗಾರ ಮಾಡಲಾಗಿದೆ.
ವಿಶೇಷ ಪೂಜೆಗಳ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 8 ಗಂಟೆಯವರೆಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಬಳಿಕ ಬೆಳಗ್ಗೆ 8.30 ಗಂಟೆಯಿಂದ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ವರ್ಧಂತಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ದೇವಿಯ ಆಶೀರ್ವಾದ ಪಡೆಯುತ್ತಿದ್ದಾರೆ.

