ಮೈಸೂರು : ಸರ್ಕಾರದ ಸಾಧನೆಗಳನ್ನು ಜನರ ಮುಂದಿಡುವ ಕಾಂಗ್ರೆಸ್ ಪಕ್ಷದ ಸಾಧನಾ ಸಮಾವೇಶ ಸಿಎಂ ಶಕ್ತಿ ಪ್ರದರ್ಶನದ ಕಾರ್ಯಕ್ರಮವಾಗಿ ಮಾರ್ಪಟ್ಟಿತೆ ಎಂಬ ವಿಶ್ಲೇಷಣೆ ಶುರುವಾಗಿದ್ದು, ಸಿದ್ದು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡೆಯೇ ಇಂಥದೊAದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.
ತವರು ಜಿಲ್ಲೆ ಮೈಸೂರಿನಲ್ಲಿ ಶನಿವಾರ ನಡೆದ ಸಾಧನಾ ಸಮಾವೇಶದ ಮೂಲಕ ರಾಜಕೀಯ ಸಂದೇಶವೊAದನ್ನು ರವಾನಿಸಲು ಪ್ರಯತ್ನಿಸಿರುವ ಸಿಎಂ ಸಿದ್ದರಾಮಯ್ಯ, ಪರೋಕ್ಷವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಗೆ ಟಾಂಗ್ ನೀಡಿದ್ದಾರೆ. ಬೆಳಗ್ಗೆ ಶುರುವಾದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಜತೆಯೇ ವೇದಿಕೆಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ತಮ್ಮ ಭಾಷಣ ಮುಗಿಸಿ ಸಮಾವೇಶದಿಂದ ನಿರ್ಗಮಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು
ವೇದಿಕೆಯಲ್ಲಿದ್ದಾಗಲೇ ಡಿಕೆಶಿ ಕಾರ್ಯ ಕ್ರಮವನ್ನು ಅರ್ಧಕ್ಕೆ ಬಿಟ್ಟು ತೆರಳಿದ್ದು ಅನೇಕರ ಅಚ್ಚರಿಗೆ ಕಾರಣವಾಯಿತು.
ತದನಂತರ ಜನರನ್ನುದ್ದೇಶಿಸಿ ಭಾಷಣ ಶುರು ಮಾಡಿದ ಸಿಎಂ ಸಿದ್ದರಾಮಯ್ಯ, ವೇದಿಕೆಯಲ್ಲಿದ್ದ ಎಲ್ಲರಿಗೂ ಸ್ವಾಗತ ಕೋರಿದರು. ಆದರೆ ಡಿಕೆಶಿ ಅವರ ಹೆಸರನ್ನು ಮಾತ್ರ ಪ್ರಸ್ತಾಪಿಸಲಿಲ್ಲ. ಇದನ್ನು ವೇದಿಕೆಯ ಮೇಲಿದ್ದವರೊಬ್ಬರು ಗಮನಕ್ಕೆ ತಂದಾಗ ಏಕಾಏಕಿ ಗರಂ ಆದ ಸಿಎಂ, ಯಾವಾಗಲೂ ಇರೋರ ಹೆಸರನ್ನ ಹೇಳಬೇಕೆ ಹೊರತು ಹೊರಟು ಹೋದವರ ಹೆಸರು ಹೇಳೋಕಾಗಲ್ಲ. ಸ್ವಾಗತ ಕೋರೋದು ಕಾರ್ಯ ಕ್ರಮದಲ್ಲಿ ಇರೋರಿಗೆ. ಮನೇಲಿ ಕೂತವರಿಗೆಲ್ಲ ಸ್ವಾಗತ ಮಾಡೋಕೆ ಆಗಲ್ಲ. ಇದನ್ನು ನೀವು ಸ್ವಲ್ಪ ಅರ್ಥ ಮಾಡಿಕೊಳ್ಳಬೇಕು’ ಎಂದು ಖಾರವಾಗಿ ನುಡಿದರು. ಆ ಮೂಲಕ ಎಐಸಿಸಿ ಅಧ್ಯಕ್ಷರ ಮುಂದೆಯೇ ಮಾರ್ಮಿಕವಾಗಿ ರಾಜಕೀಯ ಸಂದೇಶವೊAದನ್ನು ರವಾನಿಸುವ ಪ್ರಯತ್ನ ಮಾಡಿದರು. ಅಧಿಕಾರ ಹಂಚಿಕೆ ಹಗ್ಗಜಗ್ಗಾಟದ ಮಧ್ಯೆಯೇ ಸಿಎಂ ಇಂಥದೊAದು ಹೇಳಿಕೆ ನೀಡಿದ್ದು ಹಾಗೂ ಡಿಕೆಶಿ ಅರ್ಧಕ್ಕೇ ಸಮಾವೇಶದಿಂದ ತೆರಳಿದ್ದು ಚರ್ಚೆಗೆ ಆಸ್ಪದ ನೀಡಿದೆ.
ಕಾಂಗ್ರೆಸ್ ಗ್ಯಾರಂಟಿಗಳನ್ನು ಟೀಕಿಸುತ್ತಿದ್ದ ಬಿಜೆಪಿ ಈಗ ಅದನ್ನು ಕದ್ದು ಬಿಹಾರ ಸೇರಿದಂತೆ ಇತರೆ ರಾಜ್ಯಗಳಲ್ಲಿಯೂ ಘೋಷಣೆ ಮಾಡುತ್ತಿದೆ. ಬಿಜೆಪಿ ನಾಯಕರಿಗೆ ನಾಚಿಕೆ ಆಗಲ್ವ. ಕಾಂಗ್ರೆಸ್ ಬಗ್ಗೆ ಆರೋಪ ಮಾಡುವ ಬದಲಿಗೆ ದಾಖಲೆ ಇದ್ದರೆ ಸದನದಲ್ಲಿ ಅಥವಾ ಜನತಾ ನ್ಯಾಯಾಲಯದ ಮುಂದೆ ಬಹಿರಂಗ ಚರ್ಚೆಗೆ ಬರುವಂತೆ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಅಭಿವೃದ್ಧಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಇವತ್ತಿನ ಅಭಿವೃದ್ಧಿ ಕಾರ್ಯಗಳೇ ಉತ್ತರ. ಬಿಜೆಪಿ-ಜೆಡಿಎಸ್ ನವರಿಗೆ ಈ ಮಟ್ಟಿನ ಮತ್ಸರ ಇರಬಾರದು. ರಾಜಕೀಯ ದ್ವೇಷ, ಹೊಟ್ಟೆಹುರಿ ಬಿಡಿ. ರಾಜಕೀಯವಾಗಿ ಮಾತನಾಡಲಿ. ದಾಖಲೆ ಇದ್ದರೆ ಬಹಿರಂಗವಾಗಿ ನನ್ನೊಂದಿಗೆ ಚರ್ಚೆಗೆ ಬರಲಿ. ನಾನು ಉತ್ತರ ಕೊಡುತ್ತೇನೆ ಎಂದರು.
ಬಾಯಿ ಬಿಡದ ಕುಮಾರಣ್ಣ ಬಿಜೆಪಿ ಮತ್ತು ಜೆಡಿಎಸ್ ರಾಜ್ಯದ ಪರವಾಗಿ ಇಲ್ಲ. ರಾಜ್ಯದ ಜನರ ಪರವಾಗಿ ಯೂ ಇಲ್ಲ. ಪ್ರತಿ ವರ್ಷ ನಾವು ರಾಜ್ಯದಿಂದ ಕೇಂದ್ರಕ್ಕೆ ಕೊಡುವ ತೆರಿಗೆಯಲ್ಲಿ ರಾಜ್ಯಕ್ಕೆ ಬರುತ್ತಿರುವುದು ಅತ್ಯಲ್ಪ. ರಾಜ್ಯಕ್ಕೆ ಆದ ಅನ್ಯಾಯವನ್ನು ಸರಿಪಡಿಸಿ ಎಂದು ಮೋದಿಯವರಿಗೆ ಕೇಳುವ ಧೈರ್ಯ ಕೇಂದ್ರ ಸಚಿವ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಸೇರಿ ಸಂಸದರಾದ ಬೊಮ್ಮಾಯಿ ಸೇರಿ ಯಾರಿಗೂ ಇಲ್ಲ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಸೊಲ್ಲೆತ್ತದ ಬಿಜೆಪಿ-ಜೆಡಿಎಸ್ ರಾಜ್ಯದ ಜನಕ್ಕೆ ದ್ರೋಹ ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಐದು ಗ್ಯಾರಂಟಿಗಳಲ್ಲದೆ ಅಭಿವೃದ್ಧಿ ಕಾರ್ಯಗಳಿಗೆ ಲಕ್ಷ ಕೋಟಿಯಷ್ಟು ಹಣ ಕೊಟ್ಟಿದ್ದೇವೆ. ನಾವು ಜಾರಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಕೇವಲ ಕಾಂಗ್ರೆಸ್ ನವರಿಗೆ ಕೊಟ್ಟಿದ್ದಲ್ಲ. ಬಿಜೆಪಿ ಜೆಡಿಎಸ್ ಬೆಂಬಲಿಗರು, ಮತದಾರರಿಗೂ ಪ್ರತೀ ದಿನ, ಪ್ರತೀ ತಿಂಗಳೂ ಸರ್ಕಾರದ ನೆರವು ದೊರೆಯುತ್ತಿದೆ. ಮೊನ್ನೆಯಷ್ಟೇ ಶಕ್ತಿ ಯೋಜನೆಯಡಿಯಲ್ಲಿ ಪ್ರಯಾಣಿಸಿದ 5೦೦ನೇ ಕೋಟಿಯ ಮಹಿಳೆಗೆ ನಾನೇ ಉಚಿತ ಟಿಕೆಟ್ ಕೊಟ್ಟಿದ್ದೇನೆ. ಇದು ನಮ್ಮ ಸರ್ಕಾರದ ಬದ್ಧತೆ ಎಂದರು.
ಆರ್ಎಸ್ಎಸ್ ನಾಯಕರು ಮನುವಾದಿ ಗಳು. ಸಾಮಾಜಿಕ ನ್ಯಾಯ ಮತ್ತು ಹಿಂದುಳಿದ ಸಮುದಾಯಗಳ ಅಭಿವೃದ್ಧಿಯ ವಿರೋಧಿಗಳು, ಸಂವಿಧಾನದ ವಿರೋಧಿಗಳು. ಆದ್ದರಿಂದ ಸಾಮಾಜಿಕ ನ್ಯಾಯದ ಪರವಾಗಿರುವ ನಮ್ಮನ್ನು ಟೀಕಿಸುತ್ತಿದ್ದಾರೆ. ಸಂವಿಧಾನವನ್ನು ಬದಲಾಯಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ. ದೇಶದ ಜನ ಮತ್ತು ಕಾಂಗ್ರೆಸ್ ಪಕ್ಷ ಬಿಜೆಪಿ ಮತ್ತು ಮನುವಾದಿಗಳ ಷಡ್ಯಂತ್ರವನ್ನು ಸೋಲಿಸುತ್ತಾರೆ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ. ಪರಮೇಶ್ವರ್, ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಕೆ.ಎಚ್. ಮುನಿಯಪ್ಪ, ಕೆ. ವೆಂಕಟೇಶ್, ಕೆ.ಜೆ. ಜಾರ್ಜ್, ಸಂಸದ ಸುನಿಲ್ ಬೋಸ್ ಇನ್ನಿತರರು ಇದ್ದರು.


