ಶಿವಮೊಗ್ಗ : ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನಕ್ಕೆ ಬೆಂಗಳೂರಿನಿಂದ ತೆರಳುತ್ತಿದ್ದ ಸ್ನೇಹಿತರ ಕಾರು ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಭೀಕರ ಅಪಘಾತಕ್ಕೀಡಾಗಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ ಹೊಡೆದು ಮೂರು ಬಾರಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಆರು ಮಂದಿಗೂ ಗಾಯಗಳಾಗಿವೆ.


ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಅಪಘಾತದ ವೇಳೆ ಸಾಗರ ಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ತಕ್ಷಣ ರಕ್ಷಣಾ ಕಾರ್ಯ ನಡೆಸಿದರು. ಘಟನೆಯ ಬಗ್ಗೆ ಮಾಹಿತಿ ನೀಡಿದ ಎಎಸ್ಐ ಮೀರಾಬಾಯಿ, ಪೊಲೀಸ್ ವಾಹನವು ಕೇವಲ ಒಂದೆರಡು ನಿಮಿಷಗಳ ಮುಂಚೆಯೇ ಅದೇ ಮಾರ್ಗದಲ್ಲಿ ಸಾಗಿದ್ದು, ಸ್ವಲ್ಪ ತಡವಾಗಿದ್ದರೆ ಕಾರು ಪೊಲೀಸ್ ವಾಹನಕ್ಕೂ ಡಿಕ್ಕಿ ಹೊಡೆಯುವ ಸಾಧ್ಯತೆ ಇತ್ತು ಎಂದು ತಿಳಿಸಿದ್ದಾರೆ.
ಅಪಘಾತದ ನಿಖರ ಕಾರಣದ ಕುರಿತು ಸಾಗರ ಪೇಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

