ಉಡುಪಿ : ಮಲ್ಪೆ ನಿವಾಸಿ ಸಂದೀಪ್ ಸಾಲ್ಯಾನ್ ಅವರ ನಿಗೂಢ ಸಾವು ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಆರಂಭದಲ್ಲಿ ನಿಗೂಢ ಸಾವಿನಂತೆ ಕಂಡುಬಂದಿದ್ದ ಈ ಪ್ರಕರಣದ ತನಿಖೆಯಲ್ಲಿ ಇದು ವ್ಯವಸ್ಥಿತವಾಗಿ ನಡೆದ ಕೊಲೆ ಎಂಬುದು ಬೆಳಕಿಗೆ ಬಂದಿದೆ.
ಪ್ರಕರಣದ ಪ್ರಮುಖ ಆರೋಪಿ ಮಹಿಳೆಯನ್ನು ಕ್ಯಾಲಂಗುಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಮೂಲತಃ ಮಂಗಳೂರಿನ ನಿವಾಸಿಯಾಗಿದ್ದು, ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಅಕ್ಷತಾ ಎಂದು ಗುರುತಿಸಲಾಗಿದೆ.
ಪೊಲೀಸ್ ತನಿಖೆ ಪ್ರಕಾರ, ರೆಸಾರ್ಟ್ನ ಕೊಠಡಿಯಲ್ಲಿ ಸಂದೀಪ್ ಸಾಲ್ಯಾನ್ ಅವರನ್ನು ಕಟ್ಟರ್ನಿಂದ ಕತ್ತು ಕೊಯ್ದು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಬಳಿಕ ಅವರ ಬಳಿಯಿದ್ದ ಚಿನ್ನಾಭರಣಗಳು ಹಾಗೂ ನಗದನ್ನು ದೋಚಿಕೊಂಡು ಆರೋಪಿ ಪರಾರಿಯಾಗಿದ್ದಳು ಎನ್ನಲಾಗಿದೆ.
ಸಂದೀಪ್ ನಾಪತ್ತೆಯಾದ ನಂತರ ಆರೋಪಿ ತಲೆಮರೆಸಿಕೊಂಡಿದ್ದಳು. ನಿರಂತರ ಕಾರ್ಯಾಚರಣೆ ನಡೆಸಿದ ಕ್ಯಾಲಂಗುಟ್ ಪೊಲೀಸರು ಅಕ್ಷತಾಳನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಯ ಹಿಂದೆ ಮತ್ತಾರಾದರೂ ಭಾಗಿಯಾಗಿದ್ದಾರೆಯೇ? ಅಥವಾ ಈ ಕೃತ್ಯದ ಹಿಂದಿನ ನಿಖರ ಉದ್ದೇಶವೇನು? ಎಂಬ ಕುರಿತು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದು, ವಿಚಾರಣೆಯ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆಯಿದೆ.


