ಉಧಮ್ಪುರ : ಜಮ್ಮು ಕಾಶ್ಮೀರದ ರಾಮನಗರ-ಉಧಮ್ಪುರ ಹೆದ್ದಾರಿಯಲ್ಲಿ ಸೋಮವಾರ ಚಾಲಕನ ನಿಯಂತ್ರಣ ತಪ್ಪಿ ಬಸ್ವೊಂದು ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಪರಿಣಾಮ 21 ಪ್ರಯಾಣಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 29 ಜನರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಹಲವರು ತೀವ್ರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಉಧಮ್ಪುರ್ ಕಡೆಗೆ ಹೋಗುತ್ತಿದ್ದ ಬಸ್ ಕಂದಕಕ್ಕೆ ಉರುಳಿದೆ.
ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ರಾಮನಗರ ಪ್ರದೇಶದ ಕಾಗೋರ್ಟ್ ಹಳ್ಳಿ ಬಳಿಯ ಕಡಿದಾದ ತಿರುವು ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡಿದೆ. ಘಟನೆಗೆ ಚಾಲಕನ ವೇಗ ಮತ್ತು ನಿರ್ಲಕ್ಷವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪ್ರದೇಶದ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ಮಾಡಿ ಗಾಯಾಳುಗಳನ್ನು ನಜ್ಜುಗುಜ್ಜಾದ ಬಸ್ನಿಂದ ಹೊರತೆಗೆದಿದ್ದು, ಉಧಮ್ಪರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀವ್ರವಾಗಿ ಗಾಯಗೊಂಡವರನ್ನು ಜಮ್ಮ ಸರ್ಕಾರಿ ಆಸ್ಪತ್ರೆಗೆ ಏರ್ಲಿಫ್ಟ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸ್ ಹಾಗೂ ತುರ್ತು ರಕ್ಷಣಾ ಪಡೆ ಸ್ಥಳಕ್ಕೆ ಆಗಮಿಸಿ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿ ಪ್ರದೇಶವನ್ನು ತೆರವುಗೊಳಿಸಿದ್ದಾರೆ.
ಗಾಯಾಳುಗಳಿಗೆ ಅಗತ್ಯ ಸಹಕಾರ ನೀಡುವಂತೆ ಅಲ್ಲಿನ ಜಿಲ್ಲಾಧಿಕಾರಿ ಮಿಂಗ ಶೇರ್ಪಾ ಅವರಿಗೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಸೂಚನೆ ನೀಡಿದ್ದಾರೆ. ಘಟನೆಯ ಬಗ್ಗೆ ಪ್ರಧಾನಿ ಮೋದಿವಿಷಾದ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸAತಾಪ ಸೂಚಿಸಿದ್ದಾರೆ. ಜೊತೆಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು, ಗಾಯಾಳುಗಳಿಗೆ ಐವತ್ತು ಸಾವಿರ ನೀಡುವುದಾಗಿ ತಿಳಿಸಿದ್ದಾರೆ.


