Thursday, March 12, 2026
Flats for sale
Homeಜಿಲ್ಲೆಉಪ್ಪಿನಂಗಡಿ ; ಹಸುಗೂಸು ಸಹಿತ ಮಕ್ಕಳಿಬ್ಬರನ್ನು ಬಿಟ್ಟು ಹೋದ ದಂಪತಿ.

ಉಪ್ಪಿನಂಗಡಿ ; ಹಸುಗೂಸು ಸಹಿತ ಮಕ್ಕಳಿಬ್ಬರನ್ನು ಬಿಟ್ಟು ಹೋದ ದಂಪತಿ.

ಉಪ್ಪಿನಂಗಡಿ ; ಮನೆಯೊಂದರಲ್ಲಿ ತಮ್ಮ ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಬಿಟ್ಟು ನಾಪತ್ತೆಯಾಗಿರುವ ಹೆತ್ತವರ ಪತ್ತೆಗಾಗಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು, ಈ ಮಕ್ಕಳನ್ನು ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಿದ ಘಟನೆ ಕರಾಯದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕು ಕರಾಯ ಪರಿಸರದಲ್ಲಿ ಅಲೆಮಾರಿ ಜನಾಂಗದ ದಂಪತಿ ಬುಟ್ಟಿ ಹೆಣೆಯುವ ಕಾಯಕದೊಂದಿಗೆ ಆಗಾಗ ಕಾಣಿಸಿಕೊಂಡು ಪರಿಸರದ ನಿವಾಸಿಗರ ವಿಶ್ವಾಸಗಳಿಸಿದ್ದರು. ಮದ್ಯ ವ್ಯಸನಿಗಳಾದ ಇವರು ಅಲ್ಲಲ್ಲಿ ಮಲಗಿಕೊಂಡು ಅವ್ಯವಸ್ಥಿತ ಜೀವನ ನಡೆಸುತ್ತಿದ್ದರು. ದಂಪತಿಗೆ ದಿನೇಶ ಎಂಬ ನಾಲ್ಕು ವರ್ಷದ ಮಗನಿದ್ದು, ಒಂದು ತಿಂಗಳ ಹಿಂದೆಯಷ್ಟೇ ಹೆಣ್ಣು ಮಗು ಜನಿಸಿತ್ತು.

ಜೂ. 2ರಂದು ಈ ಎರಡು ಮಕ್ಕಳನ್ನು ಕರಾಯ ಗ್ರಾಮದ ಮನೆಯೊಂದರಲ್ಲಿ ಬಿಟ್ಟು ನಾವು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಹೋಗಿ ಬರುತ್ತೇವೆ ಎಂದು ಹೇಳಿ ಈ ದಂಪತಿ ತೆರಳಿದ್ದಾರೆ. ಮಾನವೀಯತೆ ಮೆರೆದ‌ ಮನೆಯೊಡತಿ ಫಾತಿಮಾ ಅವರು ಇದಕ್ಕೆ ಒಪ್ಪಿಕೊಂಡಿದ್ದರು. ಆದರೆ ಆ ಬಳಿಕ ಈ ದಂಪತಿಯ ಪತ್ತೆಯಿರಲಿಲ್ಲ. ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳ ಲಾಲನೆ ಪಾಲನೆ ಮಾಡಿದ ಫಾತಿಮಾ ಅವರು 2 ದಿನ ಕಳೆದರೂ ಹೆತ್ತವರು ಕಾಣಿಸಿಕೊಳ್ಳದೇ ಹೋದಾಗ ಕಳವಳಗೊಂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳ ಗಮನಕ್ಕೆ ತಂದು ಮಕ್ಕಳನ್ನು ರವಿವಾರ ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಿದರು.

ಮಕ್ಕಳನ್ನು ಬಿಟ್ಟು ಹೋಗಿ ಮೂರು ದಿನವಾದರೂ ಹೆತ್ತವರ ಪತ್ತೆ ಇಲ್ಲದಿರುವುದನ್ನು ಗಮನಿಸಿದ ಫಾತಿಮಾ ಸೋಮವಾರ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿ, ದಂಪತಿಯನ್ನು ಪತ್ತೆ ಹಚ್ಚಲು ವಿನಂತಿಸಿದ್ದಾರೆ. ದಂಪತಿಯ ಪೈಕಿ ಗಂಡನ ಹೆಸರು ತಿಳಿದಿಲ್ಲವೆಂದೂ, ಪತ್ನಿಯ ಹೆಸರು ಆಕೆಯ ಮಗ ತಿಳಿಸಿದ ರೀತಿಯಲ್ಲಿ ಲೀಲಾ ಎಂಬುದಾಗಿದೆ ಎಂದು ದೂರಿನಲ್ಲಿ ಉಲ್ಲೇಖೀಸಲಾಗಿದೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular