ಚಾಮರಾಜನಗರ : ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಕುಟುಂಬದವರೊಂದಿಗೆ ಭೇಟಿ ನೀಡಿದ್ದ 10 ವರ್ಷದ ಬಾಲಕ ಚಿರತೆ ದಾಳಿಗೆ ಬಲಿಯಾದ ದುರ್ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಬೆಂಗಳೂರು ನಿವಾಸಿ ಸುರೇಶ್ ಅವರ ಪುತ್ರ ಹರ್ಷಿತ್ (10) ಮೃತ ಬಾಲಕ. ಕುಟುಂಬದವರು ಮಲೆ ಮಾದೇಶ್ವರ ಬೆಟ್ಟದಲ್ಲಿ ಪೂಜೆ ಸಲ್ಲಿಸಿದ ಬಳಿಕ ಇಂದು ಬೆಳಗ್ಗೆ ಸುಮಾರು 6 ಗಂಟೆ ವೇಳೆ ನಾಗಮಲೆಗೆ ತೆರಳುತ್ತಿದ್ದರು. ಈ ವೇಳೆ ಇಂಡಿಗನತ್ತ ಅರಣ್ಯ ಪ್ರದೇಶದ ಬಳಿ ಏಕಾಏಕಿ ಚಿರತೆ ದಾಳಿ ನಡೆಸಿದೆ.
ಕುಟುಂಬದವರ ಕಣ್ಣೆದುರೇ ಬಾಲಕನನ್ನು ಚಿರತೆ ಎಳೆದುಕೊಂಡು ಹೋಗಿದ್ದು, ಬಳಿಕ ಅರಣ್ಯ ಪ್ರದೇಶದಲ್ಲಿ ಬಾಲಕನ ಶವ ಪತ್ತೆಯಾಗಿದೆ. ಘಟನೆಯಿಂದ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.


