ಚಾಮರಾಜನಗರ : ಚಾಮರಾಜನಗರದ ಬಂಡೀಪುರದಲ್ಲಿ ಸಫಾರಿಗೆ ತೆರಳುವ ಪ್ರವಾಸಿಗರಿಗೆ ಸಂತಸದ ಸುದ್ದಿಯಿದೆ. ಸಫಾರಿಗೆ ತೆರಳುವ ಪ್ರವಾಸಿಗರಿಗೆ ವಿಮೆ ಸೌಲಭ್ಯ ಕಲ್ಪಿಸಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ. ಸಫಾರಿ ವೇಳೆ ಪ್ರವಾಸಿಗರ ವಾಹನಗಳಿಗೆ ಕಾಡುಪ್ರಾಣಿಗಳು ದಾಳಿ ಮಾಡಿ ಅಪಘಾತವಾದರೆ ವಿಮೆ ಪರಿಹಾರ ನೀಡಲು ಅರಣ್ಯ ಇಲಾಖೆ ನಿರ್ಧರಿಸಿದೆ ಎಂದು ಹುಲಿ ಯೋಜನೆ ನಿರ್ದೇಶಕ ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಕಳ್ಳಬೇಟೆ ತಡೆ ಶಿಬಿರದಲ್ಲಿ ಈಗಾಗಲೇ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ವಿಮಾ ಸೌಲಭ್ಯ ನೀಡಲಾಗಿದೆ. ಕಾಡುಪ್ರಾಣಿ ದಾಳಿಯಿಂದ ಮೃತಪಟ್ಟರೆ ಸಿಬ್ಬಂದಿ ಕುಟುಂಬಕ್ಕೆ ರೂ.30 ಲಕ್ಷ ವಿಮಾ ಪರಿಹಾರ ನೀಡಲಾಗುವುದು. ಇದೀಗ ಸಫಾರಿ ಶುಲ್ಕದ ಜೊತೆಗೆ 5 ರೂಪಾಯಿ ಹೆಚ್ಚುವರಿಯಾಗಿ ಪ್ರವಾಸಿಗರಿಗೆ ವಿಮೆ ಸೌಲಭ್ಯ ಕಲ್ಪಿಸಲು ಚಿಂತನೆ ನಡೆಸಲಾಗಿದ್ದು, ವಿಮಾ ಕಂಪನಿಗಳೊಂದಿಗೆ ಮಾತುಕತೆ ನಡೆಯುತ್ತಿದೆ. ರಾಜ್ಯದಲ್ಲಿಯೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ಬಂಡೀಪುರದಲ್ಲಿ ಆನೆ, ಕರಡಿ, ಚಿರತೆ, ಕಾಡೆಮ್ಮೆ, ಜಿಂಕೆ ಮುಂತಾದ ಪ್ರಾಣಿಗಳಿವೆ. ಬೆಳಗಾವಿಯ ಪರಿಸರವಾದಿ ಗಿರಿಧರ ಕುಲಕರ್ಣಿ ಅವರ ಮನವಿಗೆ ಅರಣ್ಯ ಇಲಾಖೆ ಸ್ಪಂದಿಸಿ ಸಂರಕ್ಷಿತ ಪ್ರದೇಶಗಳಲ್ಲಿ ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಬರುವ ಪ್ರವಾಸಿಗರಿಗೆ ವಿಮೆ ಭದ್ರತೆ ಒದಗಿಸುವಂತೆ ಮನವಿ ಮಾಡಲಾಗಿದೆ. ಅದರಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ವಿಮಾ ಯೋಜನೆ ಜಾರಿಗೊಳಿಸಲು ಸೂಚನೆ ನೀಡಿದ್ದು, ಸಫಾರಿ ವೇಳೆ ಪ್ರವಾಸಿಗರ ವಾಹನಕ್ಕೆ ಕಾಡುಪ್ರಾಣಿಗಳು ದಾಳಿ ಮಾಡಿ ಅವಘಡ ಸಂಭವಿಸಿದರೆ ವಿಮೆ ಪರಿಹಾರ ನೀಡಲು ಅರಣ್ಯ ಇಲಾಖೆ ಮುಂದಾಗಿದೆ.


