ಚಿಕ್ಕಮಗಳೂರು : ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಒಂಟಿ ಸಲಗ ದಾಳಿ ಮಾಡಿ ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೆಂಚೇನಹಳ್ಳಿ ತಾಲೂಕಿನಲ್ಲಿ ನಡೆದಿದೆ.
ಮಾನವ ಹಾಗೂ ಕಾಡುಪ್ರಾಣಿಗಳ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು ಕಾಡಾನೆ ದಾಳಿಗೆ ಮತ್ತೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಕಾರ್ಮಿಕನನ್ನು ಶ್ರೀಧರ್ ಎಂದು ತಿಳಿದುಬಂದಿದೆ. ಮೃತ ಕಾರ್ಮಿಕ ಶ್ರೀಧರ್, ತಮಿಳುನಾಡು ಮೂಲದವನಾಗಿದ್ದು, ಕಾಫಿ ತೋಟದ ಕೆಲಸಕ್ಕೆ ಕುಟುಂಬ ಸಮೇತ ಬಂದಿದ್ದರು ಎಂದು ತಿಳಿದಿದೆ. ಈ ನಡುವೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಡಾನೆ ಬೀಟಮ್ಮ ಗ್ಯಾಂಗ್ ದಿನಕ್ಕೊಂದು ಗ್ರಾಮದಲ್ಲಿ ಕಾಣಿಸಿಕೊಂಡು ಭಯದ ವಾತಾವರಣ ಸೃಷ್ಟಿ ಮಾಡುತ್ತಿದೆ. ಅದರಂತೆ ಮೂಡಿಗೆರೆ ತಾಲೂಕಿನಲ್ಲಿ ಬೀಡುಬಿಟ್ಟಿರುವ ಈ ಗ್ಯಾಂಗ್ನ ದಾಂಧಲೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶಗೊಂಡಿದೆ. ಈ ಬಗ್ಗೆ ಅರಣ್ಯ ಇಲಾಖೆಯ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದು, ಕಾಡಾನೆ ಹಿಂಡನ್ನು ಕಾಡಿಗಟ್ಟುವಂತೆ ಆಗ್ರಹಿಸಿದ್ದರು. ಇನ್ನು ಜಿಲ್ಲೆಯಲ್ಲಿ ಕಾಡಾನೆ ಹಾವಳಿಗೆ ಎಷ್ಟೇ ಕಟ್ಟುನಿಟ್ಟಿನ ಕ್ರಮಕೈಗೊಂಡರೂ ಕೂಡ ಇದನ್ನು ತಡೆಯಲಾಗುತ್ತಿಲ್ಲ. ಅದರಂತೆ ಕಳೆದ ಹತ್ತು ತಿಂಗಳಲ್ಲಿ 4 ನಾಲ್ಕು ಜನ ಕಾಡಾನೆಗೆ ಕೊನೆಯುಸಿರೆಳೆದಿದ್ದಾರೆ. ಇನ್ನಾದರೂ ಅರಣ್ಯ ಇಲಾಖೆ ಎಚ್ಚೆತ್ತು ಸೂಕ್ತ ಕ್ರಮಕೈಗೊಳ್ಳಬೇಕಿದೆ.


