ಚಿಕ್ಕಮಗಳೂರು : ನಗರದ ಹನುಮಂತಪ್ಪ ವೃತ್ತದಲ್ಲಿ ಅಳವಡಿಸಲಾಗಿದ್ದ ಕಾಂಗ್ರೆಸ್ ಶಾಸಕ H. D. ತಮ್ಮಯ್ಯ ಅವರ ಭಾವಚಿತ್ರಕ್ಕೆ ಬ್ಲೇಡ್ ಹಾಕಿದ ಘಟನೆ ಬೆಳಕಿಗೆ ಬಂದಿದೆ.
ಶಾಸಕ ತಮ್ಮಯ್ಯ ಅವರ ಭಾವಚಿತ್ರದ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ D. K. ಶಿವಕುಮಾರ್ ಅವರ ಭಾವಚಿತ್ರಗಳಿಗೂ ಬ್ಲೇಡ್ ಹಾಕಲಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಹಳ್ಳಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಸಂದೀಪ್ (27) ಹಾಗೂ ದಿಲೀಪ್ (20) ಬಂಧಿತರು. ಇಬ್ಬರೂ ಚಿಕ್ಕಮಗಳೂರು ತಾಲೂಕಿನ ಕೊಳಗಾಮೆ ಗ್ರಾಮದ ನಿವಾಸಿಗಳಾಗಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಮದ್ಯದ ಅಮಲಿನಲ್ಲಿ ಫ್ಲೆಕ್ಸ್ಗೆ ಬ್ಲೇಡ್ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರ ಪೈಕಿ ಸಂದೀಪ್ ಕೂಲಿ ಕಾರ್ಮಿಕನಾಗಿದ್ದು, ದಿಲೀಪ್ ಕೆ.ಇ.ಬಿ. ಗುತ್ತಿಗೆ ಕೆಲಸ ಮಾಡುತ್ತಿರುವುದಾಗಿ ತಿಳಿದುಬಂದಿದೆ. ಪ್ರಕರಣದ ಕುರಿತು ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರಿದಿದೆ.


