ತುಮಕೂರು : ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತ್ರಿವಿಧ ದಾಸೋಹಿ, ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ, ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿಯಂದು ಕನ್ನಡದಲ್ಲೇ ಸಂದೇಶ ಪ್ರಕಟಿಸಿ ನಮನ ಸಲ್ಲಿಸಿದ್ದಾರೆ. ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಕಾಯಕ ಯೋಗಿ, ಅಭಿನವ ಬಸವಣ್ಣ, ಮಹಾ ಮಾನವತಾವಾದಿ, ತ್ರಿವಿಧ ದಾಸೋಹಿ ನಡೆದಾಡುವ ದೇವರೆಂದೆ ನಾಡಿನಾದ್ಯಂತ ಪ್ರಖ್ಯಾತರಾಗಿದ್ದ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 117 ನೇ ಜನ್ಮ ಜಯಂತಿ ಹಾಗೂ ಗುರುವಂದನಾ ಮಹೋತ್ಸವಕ್ಕೆ ಸಿದ್ದತೆಗಳು ಭರದಿಂದ ನಡೆದಿದೆ .
ಭಕ್ತವೃಂದ ಶ್ರೀಗಳ 117 ನೇ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಶ್ರೀಕ್ಷೇತ್ರದಲ್ಲಿ ಸಕಲ ಸಿದ್ದತೆಗಳು ನಡೆದಿವೆ.
ಶ್ರೀಮಠದಲ್ಲಿ ಶ್ರೀಗಳ 17ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವವನ್ನು ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಹಾಗೂ ಅತ್ಯಂತ ವೈಭವೋಪೇತವಾಗಿ ಆಚರಿಸಲು ಭಕ್ತವೃಂದ ಸರ್ವ ಸನ್ನದ್ಧವಾಗಿದ್ದು ಶ್ರೀಗಳ 117ನೇ ಜನ್ಮದಿನೋತ್ಸವ ಹಾಗೂ ಗುರುವಂದನಾ ಸಮಾರAಭಕ್ಕೆ ಶ್ರೀಕ್ಷೇತ್ರ ಸಕಲ ರೀತಿಯಲ್ಲೂ ಅಣಿ ಯಾಗಿದ್ದು, ಲಿಂಗೈಕ್ಯ ಶ್ರೀಗಳ ಜಯಂತಿಯನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತ ಸಮೂಹ ಆಗಮಿಸಿದ್ದಾರೆ.
ಶ್ರೀಗಳ 117 ನೇ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ಸರಳವಾಗಿ ಜಯಂತಿ ಆಚರಣೆ ಮಾಡಲಾಗುತ್ತಿದೆ. ಜಯಂತಿ ಪ್ರಯುಕ್ತ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ, ಮಹಾಮಂಗಳಾರತಿ ಸೋಮವಾರ ಬೆಳಗ್ಗೆ ನೆರವೇರಿತು. ವಿವಿಧ ಮಠಾಧೀಶರು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾದರು.
11 ಗಂಟೆಗೆ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯುತ್ತಿದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ರಾಜಕಾರಣಿಗಳು, ಜನಪ್ರತಿನಿಧಿಗಳು ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ.ಪುಷ್ಪಾಲಂಕಾರದೊಂದಿಗೆ ಸಿಂಗಾರಗೊಂಡಿರುವ ರುದ್ರಾಕ್ಷಿ ಮಂಟಪದಲ್ಲಿ ಗದ್ದುಗೆ ಬಳಿಯಿಂದ ವಸ್ತು ಪ್ರದರ್ಶನ ಆವರಣದವರೆಗೆ ಮೆರವಣಿಗೆ ನಡೆಯಿತು.ಮೆರವಣಿಗೆ ವೇಳೆ ಸಿದ್ಧಗಂಗಾ ಮಠದ ಭಕ್ತರು, ಮಕ್ಕಳು ಭಾಗಿಯಾದರು.


