ದಾವಣಗೆರೆ : ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗುವಂತಹ ಹೇಳಿಕೆಯನ್ನು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ನೀಡಿದ್ದಾರೆ. ಸರ್ಕಾರ ಪತನವಾಗುತ್ತದೆಯೇ ಎಂಬ ಪ್ರಶ್ನೆಗೆ ನೇರ ಉತ್ತರ ನೀಡದೇ, “ಇನ್ನೂ ಮೂರು ತಿಂಗಳ ಬಳಿಕ ಮಾತನಾಡುತ್ತೇನೆ” ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹೊಸ ಸಿಎಂ ಆಗಿದ್ದಾರೆ. ಮೂರು ತಿಂಗಳು ನಾನು ಏನೂ ಮಾತನಾಡುವುದಿಲ್ಲ. ಎರಡ್ಮೂರು ತಿಂಗಳು ಸಮಯ ಕೊಡೋಣ. ಆ ಬಳಿಕ ಎಲ್ಲದರ ಬಗ್ಗೆ ಮಾತನಾಡುತ್ತೇನೆ” ಎಂದು ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ವಿಳಂಬದ ಕುರಿತು ಪ್ರತಿಕ್ರಿಯಿಸಿದ ಅವರು, “ಹತ್ತು ದಿನಗಳಾದರೂ ಇನ್ನೂ ಸಚಿವ ಸ್ಥಾನ ಹಂಚಿಕೆ ಮಾಡಿಕೊಳ್ಳುತ್ತಿದ್ದಾರೆ. ಸದ್ಯ ಈ ಬಗ್ಗೆ ಮಾತನಾಡುವುದಿಲ್ಲ” ಎಂದರು.
ಜಮೀರ್ ಅಹ್ಮದ್ ಖಾನ್ ಅವರ ಆಡಿಯೋ ವೈರಲ್ ವಿಚಾರಕ್ಕೂ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಜಾರಕಿಹೊಳಿ, “ಸದ್ಯ ಆ ವಿಷಯದ ಬಗ್ಗೆ ಮಾತನಾಡುವುದಿಲ್ಲ” ಎಂದು ಹೇಳಿದರು.
ಬಿಜೆಪಿಗೆ ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಮರುಸೇರ್ಪಡೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಹೈಕಮಾಂಡ್ ನಿರ್ಧಾರವೇ ಅಂತಿಮ” ಎಂದರು.
ಇದೇ ವೇಳೆ, ತಾವು ಮೀಸಲಾತಿ ಹೋರಾಟ ಆರಂಭಿಸಿರುವುದಾಗಿ ತಿಳಿಸಿದ ರಮೇಶ್ ಜಾರಕಿಹೊಳಿ, ರಾಜಕೀಯ ವಿಚಾರಗಳ ಬಗ್ಗೆ ಸದ್ಯ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮೂರು ತಿಂಗಳ ಬಳಿಕ ಮಾತನಾಡುತ್ತೇನೆ ಎಂಬ ಹೇಳಿಕೆಯನ್ನು ಪದೇ ಪದೇ ಪುನರುಚ್ಚರಿಸಿರುವುದು ರಾಜ್ಯ ರಾಜಕೀಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.


