ಧಾರವಾಡ : ಕ್ಷಣಮಾತ್ರದ ನಿರ್ಲಕ್ಷ್ಯವು 17 ವರ್ಷದ ಐಟಿಐ ವಿದ್ಯಾರ್ಥಿಯ ಜೀವವನ್ನು ಬಲಿ ಪಡೆದಿರುವ ಹೃದಯವಿದ್ರಾವಕ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದ ಹುಬ್ಬಳ್ಳಿ–ಲಕ್ಷ್ಮೇಶ್ವರ ಮುಖ್ಯ ರಸ್ತೆಯ ಕೊಪ್ಪದ ಕೆರೆಯ ಬಳಿ ಬುಧವಾರ ಸಂಜೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಶಿರೂರ ಗ್ರಾಮದ ಫಕ್ಕೀರೇಶ ಚನ್ನಯ್ಯ ಮುತ್ತಳ್ಳಿಮಠ (17) ಎಂದು ಗುರುತಿಸಲಾಗಿದೆ. ಈತ ಐಟಿಐ ವಿದ್ಯಾರ್ಥಿಯಾಗಿದ್ದ.
ಸಂಜೆ ಸುಮಾರು 5 ಗಂಟೆ ವೇಳೆಗೆ ಲಕ್ಷ್ಮೇಶ್ವರ ಡಿಪೋಗೆ ಸೇರಿದ ಕೆಎ-26 ಎಫ್-1039 ಸಂಖ್ಯೆಯ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಕಿಟಕಿಯಿಂದ ತಲೆ ಹೊರಹಾಕಿ ಉಗುಳಲು ಯತ್ನಿಸಿದ್ದಾನೆ. ಇದೇ ವೇಳೆ ಬಸ್ ಅನ್ನು ಓವರ್ಟೇಕ್ ಮಾಡಲು ಮುಂದಾದ ಕೆಎ-04 ಎಡಿ-7218 ಸಂಖ್ಯೆಯ ಎಂ-ಸ್ಯಾಂಡ್ ತುಂಬಿದ ಲಾರಿ ವಿದ್ಯಾರ್ಥಿಯ ತಲೆಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ಕಂಡ ಸಾರ್ವಜನಿಕರು ಬೆಚ್ಚಿಬಿದ್ದಿದ್ದು, ಮಾಹಿತಿ ತಿಳಿದ ತಕ್ಷಣ ಕುಂದಗೋಳ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಚಾರ ಸುಗಮಗೊಳಿಸಿದರು.
ಈ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


