ನವದೆಹಲಿ : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಮೂರನೇ ಹಂತವನ್ನು ಚುನಾವಣಾ ಆಯೋಗ ಆರಂಭಿಸಿದ್ದು, ಕರ್ನಾಟಕ ಸೇರಿದಂತೆ 16 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಪ್ರಕ್ರಿಯೆ ಜಾರಿಯಾಗಲಿದೆ.
ಮೇ 20ರಿಂದ ಎಸ್ಐಆರ್ ಪ್ರಕ್ರಿಯೆ ಆರಂಭವಾಗಲಿದ್ದು, ದೇಶಾದ್ಯಂತ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಗೆ ಚುನಾವಣಾ ಆಯೋಗ ಮುಂದಾಗಿದೆ.
ಕರ್ನಾಟಕದಲ್ಲಿ ಜೂನ್ 20ರಿಂದ ಪ್ರಕ್ರಿಯೆ ಆರಂಭವಾಗಲಿದ್ದು, ಅರ್ಹ ಮತದಾರರ ಕರಡು ಪಟ್ಟಿಯನ್ನು ಅಕ್ಟೋಬರ್ 1ರಂದು ಹಾಗೂ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 7ರಂದು ಪ್ರಕಟಿಸಲಾಗುವುದು ಎಂದು ಆಯೋಗ ತಿಳಿಸಿದೆ.
ಈ ಹಿಂದೆ ನಡೆದ ಎರಡು ಹಂತಗಳ ಎಸ್ಐಆರ್ ಪ್ರಕ್ರಿಯೆಯಲ್ಲಿ 13 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು 59 ಕೋಟಿ ಮತದಾರರ ಪರಿಶೀಲನೆ ನಡೆದಿದೆ. ಈ ಕಾರ್ಯದಲ್ಲಿ 6.3 ಲಕ್ಷ ಮತಗಟ್ಟೆ ಅಧಿಕಾರಿಗಳು ಮತ್ತು 9.2 ಲಕ್ಷ ಮತಗಟ್ಟೆ ಏಜೆಂಟರು ಭಾಗವಹಿಸಿದ್ದರು ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಇನ್ನೊಂದೆಡೆ ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ ಮತ್ತು ಲಡಾಖ್ ಪ್ರದೇಶಗಳಲ್ಲಿ ಹವಾಮಾನ ಹಾಗೂ ಜನಗಣತಿ ಪ್ರಕ್ರಿಯೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಎಸ್ಐಆರ್ ನಡೆಸಲಾಗುತ್ತಿಲ್ಲ. ಪರಿಸ್ಥಿತಿ ಪರಿಶೀಲಿಸಿದ ಬಳಿಕ ಮುಂದಿನ ದಿನಾಂಕ ಪ್ರಕಟಿಸಲಾಗುವುದು ಎಂದು ಆಯೋಗ ಸ್ಪಷ್ಟಪಡಿಸಿದೆ.


