ನವದೆಹಲಿ : ಬಿಜೆಪಿಯ ಉನ್ನತ ಮೂಲಗಳ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಶಮಿ ಅವರನ್ನು ಅಭ್ಯರ್ಥಿಯಾಗಿ ಪ್ರಸ್ತಾಪಿಸಲಾಗಿದೆ ಮತ್ತು ಚರ್ಚೆಗಳು ನಡೆಯುತ್ತಿದೆ.ಸದ್ಯ ಶಮಿ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ತಮ್ಮ ಶಸ್ತ್ರಚಿಕಿತ್ಸೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ದೃಢಪಡಿಸಿದ ನಂತರ, ಪ್ರಧಾನಿ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ಶಮಿ ಅವರು ರಣಜಿ ಟ್ರೋಫಿ ಹಾಗೂ ಡೊಮೆಸ್ಟಿಕ್ ಕ್ರಿಕೆಟ್ ಪಂದ್ಯಗಳಲ್ಲಿ ಪಶ್ಚಿಮ ಬಂಗಾಳವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಅವರನ್ನು ಬಿಜೆಪಿ ಸೆಳೆದು, ಟಿಕೆಟ್ ನೀಡಲು ನಿರ್ಧರಿಸಿದೆ ಎನ್ನಲಾಗಿದೆ.ಅಂತೆಯೇ ಶಮಿಗೆ ಈ ವಿಚಾರವನ್ನು ಬಿಜೆಪಿ ನಾಯಕರು ತಿಳಿಸಿದ್ದು, ಆದರೆ ಸ್ಟಾರ್ ಕ್ರಿಕೆಟರ್ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎನ್ನಲಾಗಿದೆ. ಸದ್ಯ ಶಮಿ ಅವರು ಸರ್ಜರಿಗೆ ಒಳಗಾಗಿದ್ದು, ವಿಶ್ರಾಂತಿಯಲ್ಲಿದ್ದಾರೆ.
ಬಿಜೆಪಿಯೊಳಗಿನ ಆಂತರಿಕ ಚರ್ಚೆಗಳು ಶಮಿಯನ್ನು ಕಣಕ್ಕಿಳಿಸುವುದು ಬಂಗಾಳದ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಗೆಲುವು ಸಾಧಿಸಲು ಸಹಾಯ ಮಾಡುತ್ತದೆ ಎಂದು ಸೂಚಿಸುತ್ತದೆ. ಸದ್ಯಕ್ಕೆ ಶಮಿ ತಮ್ಮ ನಿರ್ಧಾರವನ್ನು ಖಚಿತಪಡಿಸಿಲ್ಲ. ಪಶ್ಚಿಮ ಬಂಗಾಳದಲ್ಲಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಶಮಿ ಅವರನ್ನು ಸಂಭಾವ್ಯ ಅಭ್ಯರ್ಥಿ ಎಂದು ಪರಿಗಣಿಸುತ್ತಿದೆ ಎಂದು ವರದಿ ತಿಳಿಸಿದೆ.


