ಬೆಂಗಳೂರು : ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶಿಸಿದ ಎರಡು ತಜ್ಞರ ಸಂಸ್ಥೆಗಳ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂದು ಪಿಟಿಐ ವರದಿ ಮಾಡಿದೆ. ತಮಿಳುನಾಡಿಗೆ ಸೆ.27ರವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ತಡೆ ನೀಡುವಂತೆ ಕೋರಿ ಕರ್ನಾಟಕ ಸರ್ಕಾರ ನಿನ್ನೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ತಮಿಳುನಾಡಿಗೆ ಮತ್ತೆ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಮಿತ್ರ ಪಕ್ಷ ಡಿಎಂಕೆ ಜೊತೆ ಕಾಂಗ್ರೆಸ್ ಸರ್ಕಾರ ಮಾತನಾಡಬೇಕು. ಡಿಎಂಕೆ ಜೊತೆ ಚರ್ಚಿಸಿ ಕಾವೇರಿ ನದಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಿ. ಕೇಂದ್ರ ಮಧ್ಯ ಪ್ರವೇಶ ಮಾಡುವಂತೆ ಒತ್ತಾಯ ಮಾಡುವುದು ಸರಿಯಲ್ಲ. ತಮಿಳುನಾಡಿಗೆ ನೀರು ಬಿಟ್ಟು ಸರ್ಕಾರ ತಪ್ಪು ಮಾಡಿದೆ ಎಂದರು. ಕಾಂಗ್ರೆಸ್ ವಿರುದ್ಧ ಸಿಟಿ ರವಿ ವಾಗ್ದಾಳಿ ತಮಿಳುನಾಡಿಗೆ ಮತ್ತೆ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ, ಸುಪ್ರೀಂಕೋರ್ಟ್ ತೀರ್ಪು ಗಾಯದ ಮೇಲೆ ಬರೆ ಎಳೆದಂತಾಗಿದೆ. ತಮಿಳುನಾಡು ಕೇಳುವುದಕ್ಕಿಂತ ಮೊದಲೇ ಕರ್ನಾಟಕ ನೀರು ಬಿಟ್ಟಿದೆ. ತಮಿಳುನಾಡಿಗೆ ರಾಜ್ಯ ಸರ್ಕಾರ ಯಾರ ಭಯದಿಂದ ನೀರು ಬಿಟ್ಟಿದೆ. ರಾಜ್ಯ ಸರ್ಕಾರಕ್ಕೆ ಡಿಎಂಕೆ ಬೆದರಿಕೆ ಹಾಕಿರಬಹುದು. ನಿಮ್ಮ I.N.D.I.Aದ ಭಾಗ ಆಗಬೇಕೆಂದರೆ ನೀರು ಬಿಡಿ ಎಂದಿರಬಹುದು ಅಥವಾ ನಿಮ್ಮ ಹೈಕಮಾಂಡ್ ನೀರು ಬಿಡಲು ಸೂಚನೆ ನೀಡಿರಬಹುದು. ನೀರು ಬಿಟ್ಟು ಸಭೆ ಕರೆಯುವ ಹೊಸ ಸಂಪ್ರದಾಯ ಶುರು ಮಾಡಿದ್ದೀರಿ ಎಂದರು. ವಿಧಾನಸೌಧ ಮುತ್ತಿಗೆ ಹಾಕಲು ಹೊರಟ ಕರವೇ ಕಾರ್ಯಕರ್ತರು ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆ ಹಾಕಲು ಕರವೇ ಕಾರ್ಯಕರ್ತರು ಹೊರಟಿದ್ದಾರೆ. ಕರವೇ ಅಧ್ಯಕ್ಷ ನಾರಾಯಣ ಗೌಡ ನೇತೃತ್ವದಲ್ಲಿ ಹೊರಟ ರ್ಯಾಲಿಯನ್ನು ಮೌರ್ಯ ಸರ್ಕಲ್ ಬಳಿ ಬ್ಯಾರಿಕೇಡ್ ಹಾಕಿ ರ್ಯಾಲಿ ತಡೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಎಲ್ಲರನ್ನೂ ವಶಕ್ಕೆ ಪೊಲೀಸರ ಪ್ಲಾನ್ ಹಾಕಲಾಗಿದೆ. ಸದ್ಯ ನಾರಾಯಣ ಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಕರ್ತರನ್ನೂ ವಶಕ್ಕೆ ಪಡೆಯಲು ಆರಂಭಿಸಿದ್ದಾರೆ. ನೀರು ಹರಿಸುವಾಗ ಯಾರನ್ನು ಕೇಳಿದ್ದೀರ? ಮೊದಲು ಕಾವೇರಿ ನೀರು ಬಿಡುವಾಗ ಯಾರನ್ನ ಕೇಳಿ ಬಿಟ್ಟಿದ್ದೀರಾ? ಆಗ ರಾಜ್ಯದ ಸಂಸದರು ನೆನಪಾಗಲಿಲ್ವಾ? ಜಲಾಶಯದಲ್ಲಿ ನೀರೆಲ್ಲಾ ಖಾಲಿಯಾದ ಮೇಲೆ ನಮ್ಮನ್ನು ಕರೆದರೆ ಏನು ಪ್ರಯೋಜನ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಸ್ಟಾಲಿನ್ ಬೆಂಗಳೂರಿಗೆ ಬಂದಾಗ ಏಕೆ ಮಾತಾಡಲಿಲ್ಲ " ಇಂಡಿಯಾ ಮೈತ್ರಿಕೂಟದ ಡಿಎಂಕೆಯ ನಾಯಕರ ಜೊತೆಗೆ ಈ ಬಗ್ಗೆ ಎಷ್ಟು ಬಾರಿ ಚರ್ಚೆ ನಡೆಸಿದ್ದೀರಾ? ಮೈತ್ರಿಕೂಟದ ಸಭೆಗೆ ಬೆಂಗಳೂರಿಗೆ ತಮಿಳುನಾಡಿನ ಸಿಎಂ ಸ್ಟಾಲಿನ್ ಬಂದಾಗ ಯಾಕೆ ಮಾತನಾಡಿಲ್ಲ ಎಂದು ಪ್ರಶ್ನಿಸಿದ ಜೋಶಿ ಅವರು ಕರ್ನಾಟಕ ರಾಜ್ಯದ ಹಿತಕಾಪಾಡುವಲ್ಲಿ ನಮಗೆ ಬದ್ಧತೆ ಇದೆ. ಹಾಗಾಗಿ ಕೇಂದ್ರದ ಮಂತ್ರಿಗಳ ಜೊತೆಗೆ ಮಾತನಾಡುತ್ತೇವೆ. ಸಭೆಯಲ್ಲಿ ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಅಂತ ರಾಜ್ಯ ಸರ್ಕಾರಕ್ಕೆ ಹೇಳಿರುವುದಾಗಿ " ಜೋಶಿ ತಿಳಿಸಿದರು. ದೆಹಲಿಯಲ್ಲಿ ಬುಧವಾರ ಸಂಸದರ ಸಭೆ ಬಳಿಕ ಮಾತನಾಡಿದ ಕೇಂದ್ರ ಸಚಿವ ಜೋಶಿ ಅವರು, " ಇಂಡಿಯಾ ಮೈತ್ರಿಕೂಟ ಗಟ್ಟಿಗೊಳಿಸಲು ತಮಿಳುನಾಡಿಗೆ ನೀರು ಹರಿಸಲಾಗಿದೆ. ಈಗ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಆಗಬಾರದು ಎಂದು ಸಭೆಯಲ್ಲಿ ಹೇಳಿದ್ದೇನೆ " ಎಂದು ತಿಳಿಸಿದರು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ 2,500 ಕ್ಯೂಸೆಕ್ ನೀರು ಬಿಡಲು ಒಪ್ಪಿದ್ದು ಯಾರು? ನಮಗೆ ಕೊಟ್ಟ ಪತ್ರದಲ್ಲಿ ನೀರು ಬಿಡಲು ಆಗುವುದಿಲ್ಲ ಎಂದು ಹೇಳಿ ಪ್ರಾಧಿಕಾರದ ಸಭೆಯಲ್ಲಿ 2,500 ಕ್ಯೂಸೆಕ್ ನೀರು ಬಿಡಲು ಒಪ್ಪಿದ್ದಾರೆ ಎಂದು ಹೇಳಿದರು.


