ಬೆಂಗಳೂರು : ರಾಜ್ಯದ ವಿವಿಧ ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಬೆಂಗಳೂರಿನ ಚೌನ್ಹಾಲ್ನಲ್ಲಿ “ಕರ್ನಾಟಕ ಮುಸ್ಲಿಂ ಸಮಾವೇಶ” ನಡೆಯಿತು. ಸಮಾವೇಶದಲ್ಲಿ ರಾಜ್ಯ ಸರ್ಕಾರದ ಮುಂದೆ 10 ಪ್ರಮುಖ ಬೇಡಿಕೆಗಳನ್ನು ಮಂಡಿಸಲಾಯಿತು.
“ಕಾಂಗ್ರೆಸ್ ಸರ್ಕಾರ ಹೇಳಿದ್ದೇನು? ಮಾಡಿದ್ದೇನು? ಮುಂದೇನು?” ಎಂಬ ಘೋಷಣೆಯಡಿ ನಡೆದ ಸಮಾವೇಶದಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳ ಮುಖಂಡರು ಹಾಗೂ ಸದಸ್ಯರು ಭಾಗವಹಿಸಿದರು. ದಾವಣಗೆರೆ ಉಪಚುನಾವಣೆಯ ಬೆಳವಣಿಗೆಗಳ ಹಿನ್ನೆಲೆ ಸಮುದಾಯದಲ್ಲಿ ಅಸಮಾಧಾನ ವ್ಯಕ್ತವಾಗಿರುವುದಾಗಿ ಸಂಘಟಕರು ಹೇಳಿದರು.
ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಪೊಲೀಸ್ ಅಧಿಕಾರಿ ಸುಹೈಲ್ ಅಹ್ಮದ್, “ಮುಸ್ಲಿಂರ ಹಕ್ಕುಗಳು ಹಾಗೂ ಅಸ್ತಿತ್ವಕ್ಕಾಗಿ ಈ ಹೋರಾಟ ನಡೆಯುತ್ತಿದೆ. ಇದು ಸರ್ಕಾರ ಅಥವಾ ಕಾಂಗ್ರೆಸ್ ಪಕ್ಷದ ವಿರುದ್ಧದ ಸಮಾವೇಶವಲ್ಲ,” ಎಂದರು.
ಹಿಜಾಬ್ ನಿಷೇಧ ವಾಪಸ್ ಪಡೆಯುವ ನಿರ್ಧಾರ ಸಂಘಟನೆಗಳ ಒತ್ತಡದ ಫಲ ಎಂದು ಅವರು ಅಭಿಪ್ರಾಯಪಟ್ಟರು. ಆದರೆ ಮುಸ್ಲಿಂ ಸಮುದಾಯಕ್ಕೆ ನೀಡಿದ ಭರವಸೆಗಳಲ್ಲಿ ಬಹುತೇಕ ಈಡೇರಿಸಿಲ್ಲ ಎಂದು ಆರೋಪಿಸಿದರು.
ಸಮಾವೇಶದಲ್ಲಿ ಮುಂದಿಟ್ಟ ಪ್ರಮುಖ ಬೇಡಿಕೆಗಳು:
2ಬಿ ಮೀಸಲಾತಿಯನ್ನು ಮರು ಜಾರಿಗೊಳಿಸಬೇಕು
ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಪಡಿಸಬೇಕು
ವಕ್ಫ್ ಆಸ್ತಿ ರಕ್ಷಣೆಗೆ ವಿಶೇಷ ಯೋಜನೆ ರೂಪಿಸಬೇಕು
ಮುಸ್ಲಿಮರಿಗೆ ರಾಜಕೀಯ ಪ್ರಾತಿನಿಧ್ಯ ಹೆಚ್ಚಿಸಬೇಕು
ಜಾತಿ ಗಣತಿ ಜಾರಿಗೊಳಿಸಬೇಕು
ಮುಸ್ಲಿಂ ಸಮುದಾಯಕ್ಕೆ ಪ್ರತ್ಯೇಕ ಬಜೆಟ್ ಮಂಡಿಸಬೇಕು
ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸೌಲಭ್ಯ ಒದಗಿಸಬೇಕು
ಸಮುದಾಯದ ಅಭಿವೃದ್ಧಿಗೆ ಅನುದಾನ ಹೆಚ್ಚಿಸಬೇಕು
ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕು
ಮುಸ್ಲಿಂ ಸಮುದಾಯದ ಹಕ್ಕುಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು
ಸಾಮಾಜಿಕ ಹೋರಾಟಗಾರ ಮುಹಮ್ಮದ್ ಯಾಸೀನ್ ಮಲ್ಪೆ ಮಾತನಾಡಿ, “ಚುನಾವಣೆಗೆ ಮೊದಲು ದ್ವೇಷ ಹರಡುವ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ,” ಎಂದು ಟೀಕಿಸಿದರು.
“ಸಂವಿಧಾನಬದ್ಧವಾಗಿದ್ದ 2ಬಿ ಮೀಸಲಾತಿಯನ್ನು ಇನ್ನೂ ಮರುಸ್ಥಾಪಿಸಿಲ್ಲ. ಕೂಡಲೇ ಜಾರಿಗೆ ತರಬೇಕು. ಗೋಹತ್ಯೆ ನಿಷೇಧ ಕಾಯ್ದೆಯನ್ನು ಕೂಡಲೇ ರದ್ದುಪಡಿಸಬೇಕು,” ಎಂದು ಅವರು ಒತ್ತಾಯಿಸಿದರು.


