ಬೆಂಗಳೂರು : ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ 5 ವರ್ಷದ ಬಾಲಕಿ ವೆನ್ನೆಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ಪ್ರಿಯಾಂಕಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಗಳನ್ನು ಕೊಂದ ಆರೋಪದ ಬಳಿಕ ತಲೆಮರೆಸಿಕೊಂಡಿದ್ದ ಪ್ರಿಯಾಂಕಾ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾಳೆ.
ಈ ಪ್ರಕರಣದಲ್ಲಿ ಈಗಾಗಲೇ ಪ್ರಿಯಾಂಕಾಳ ಪ್ರಿಯಕರ ಮೋಹನ್ನನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆಯೇ ಪ್ರಿಯಾಂಕಾ ನಾಪತ್ತೆಯಾಗಿದ್ದಳು. ತೀವ್ರ ಹುಡುಕಾಟ ನಡೆಸಿದ ಕಾಡುಗೋಡಿ ಪೊಲೀಸರು, ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಆಕೆಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಸ್ನೇಹಿತರೊಬ್ಬರ ಮನೆಯಲ್ಲಿ ಆಶ್ರಯ ಪಡೆದಿದ್ದ ಪ್ರಿಯಾಂಕಾಳನ್ನು ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದು, ಪ್ರಕರಣದ ಕುರಿತು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿ ವೆನ್ನೆಲಾ ಹತ್ಯೆ ಪ್ರಕರಣ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದು, ತಾಯಿ ಹಾಗೂ ಪ್ರಿಯಕರನ ಪಾತ್ರದ ಕುರಿತು ಪೊಲೀಸರು ಮತ್ತಷ್ಟು ತನಿಖೆ ಮುಂದುವರಿಸಿದ್ದಾರೆ.

