ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿನ ಕೆಲ ನಾಯಕರಲ್ಲಿ ಅತೃಪ್ತಿ, ಅಸಮಾಧಾನ ಇರುವುದು ನಿಜ. ಹಿರಿಯ ನಾಯಕರುಗಳೆಲ್ಲ ಸೇರಿ ಇದನ್ನು ಸದ್ಯದಲ್ಲೇ ಶಮನ ಮಾಡುತ್ತೇವೆ. ಎಲ್ಲರ ಜತೆ ಮಾತನಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
ಕೇAದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ನಾಯಕರುಗಳು ಅತೃಪ್ತಿ ಅಸಮಾಧಾನಗಳನ್ನು ಈಗಾಗಲೇ ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಇದನ್ನೆಲ್ಲ ಶಮನ ಮಾಡುವ ನಿಟ್ಟಿನಲ್ಲಿ ನಾನು ಹಿರಿಯ ನಾಯಕರಾದ ಪ್ರಲ್ಹಾದ್ಜೋಷಿ, ಸಿಟಿ ರವಿ, ರವಿಕುಮಾರ್ ಎಲ್ಲ ಕುಳಿತು ಮಾತನಾಡಿದ್ದೇವೆ. ಇದು ಸ್ಥಳೀಯ ಸಮಸ್ಯೆ ಎಲ್ಲರ ಜತೆ ಚರ್ಚಿಸಿ ಎಲ್ಲವನ್ನು ಸರಿಪಡಿಸುತ್ತೇವೆ ಎಂದು ಹೆಳಿದರು.
ಜಿಲ್ಲಾಮಟ್ಟದಲ್ಲೂ ಕೆಲ ಸಮಸ್ಯೆಗಳಿವೆ. ಅವುಗಳನ್ನು ಬಗೆಹರಿಸುವ ಕೆಲಸವನ್ನು ಮಾಡುತ್ತೇವೆ ಎಲ್ಲರೂ ಒಗ್ಗಟ್ಟಾಗಿ ಒಂದಾಗಿ ಹೋಗುತ್ತೇವೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟವನ್ನು ಕೈಗೆತ್ತಿಕೊಳ್ಳುತ್ತೇವೆ ಎಂದು ಹೇಳಿದರು.ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಪ್ರಮುಖ ನಾಯಕರ ಜತೆ ಚರ್ಚಿಸಿದ್ದಾರೆ.
ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಯಾವ ರೀತಿ ಹೋರಾಟವನ್ನು ನಡೆಸಬೇಕು ಎಂಬ ಬಗ್ಗೆ ಅಮಿತ್ ಶಾ ಅವರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಹೇಳಿದರು. ರಾಜ್ಯಸರ್ಕಾರ ಅಲ್ಪಸಂಖ್ಯಾತರ ಓಲೈಕೆಗೆ ಏನೆಲ್ಲ ತೀರ್ಮಾನವನ್ನು ಮಾಡುತ್ತಿದೆ ಎಂದು ಜನರಿಗೆ ಗೊತ್ತಿದೆ. ದೇಶದ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ಪ್ರಯಾಸ್ ಎಂಬ ತತ್ವದಡಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯಾಗಲಿ, ಭೇಟಿ ಪಡಾವೋ ಯೋಜನೆಯಡಿ ಯಾವುದೇ ಸಮುದಾಯಕ್ಕೆ ಸೀಮಿತವಾಗಿಲ್ಲ ದೇಶದ ಎಲ್ಲ ಜನರ ಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನು ರೂಪಿಸಲಾಗಿದೆ. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಒಲೈಕೆ ಮಾಡುತ್ತಿದೆ ಎಂದು ಟೀಕಿಸಿದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಡೆದಾಳುವ ನೀತಿ ಅನುಸರಿಸುತ್ತಿದ್ದಾರೆ. ಇದು ಒಳ್ಳೆಯದಲ್ಲ ಮುಖ್ಯಮಂತ್ರಿಗಳ ನಡವಳಿಗೆ ಮುಖ್ಯಮಂತ್ರಿ ಸ್ಥಾನಕ್ಕೂ ಅಪಮಾನ ಮಾಡುತ್ತಿದ್ದಾರೆ. ಇವರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂದು ಹರಿಹಾಯ್ದರು. ಮುಂದಿನ ಅಧಿವೇಶನದಲ್ಲಿ ಜೆಡಿಎಸ್ ಶಾಸಕರ ಜತೆ ಚರ್ಚಿಸಿ ರಾಜ್ಯಸರ್ಕಾರದ ಸದನದ ಒಳಗೂ ಹೊರಗೂ ಹೋರಾಟ ಮಾಡುತ್ತೇವೆ ಎಂದರು.
ಬಿಜೆಪಿ ಮೊದಲಿನಿಂದಲೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕಾಂಗ್ರೆಸ್ ಹೈಕಮಾಂಡ್ನ ಎಟಿಎಂ ಆಗಿ ಕೆಲಸ ಮಾಡುತ್ತಿದೆ ಎಂಬುದನ್ನ ಹೇಳಿದ್ದೇನೆ ಈ ಸರ್ಕಾರ ಶೇ. 100 ರಷ್ಟು ಭ್ರಷ್ಟಾಚಾರದ ಸರ್ಕಾರ, ಕಾಂಗ್ರೆಸ್ ಶಾಸಕರೇ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಶಾಸಕ ಬಿ.ಆರ್ ಪಾಟೀಲ್ ಅವರ ಆಡಿಯೋ ವೈರಲ್ ಬಗ್ಗೆ ಪ್ರತಿಕ್ರಿಯಿಸಿದರು.