ಭಟ್ಕಳ : ತಾಲೂಕಿನ ವೆಂಕಟಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಪುನರ್ ನಿರ್ಮಾಣ ಮಾಡಿದ್ದ “ಮುರಿನಕಟ್ಟೆ”ಯನ್ನು ರವಿವಾರ ರಾತ್ರಿ ಅನ್ಯ ಕೋಮಿನ ಯುವಕರು ಭಾಗಶಃ ತೆರವುಗೊಳಿಸಿದ ಘಟನೆ ಉದ್ವಿಗ್ನತೆಗೆ ಕಾರಣವಾಗಿದೆ. ಹಲವಾರು ವರ್ಷಗಳಿಂದ ಧಾರ್ಮಿಕ ನಂಬಿಕೆಯ ಕೇಂದ್ರವಾಗಿದ್ದ ಸ್ಥಳವನ್ನು ಹೆದ್ದಾರಿ ಕಾಮಗಾರಿಗಾಗಿ ತೆರವುಗೊಳಿಸಲಾಗಿತ್ತು. ಪುನರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಳ್ಳದ ಹಿನ್ನೆಲೆ ಭಾನುವಾರ ಬೆಳಗ್ಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಟ್ಟೆಯನ್ನು ನಿರ್ಮಿಸಿದ್ದರು ಎಂದು ತಿಳಿದುಬಂದಿದೆ.
ಈ ವೇಳೆ ಕೆಲವು ಮುಸ್ಲಿಂ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರಚೋದನಾಕಾರಿ ಹೇಳಿಕೆಗಳು ನೀಡಲಾಗಿದೆ ಎನ್ನುವ ಆರೋಪವೂ ಕೇಳಿಬಂದಿದೆ. ಉಪವಿಭಾಗಾಧಿಕಾರಿ ಜೆ. ಮಹೇಶ ಅವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಹೆದ್ದಾರಿ ಪಕ್ಕದ ಅತಿಕ್ರಮಿತ ಜಾಗದಲ್ಲಿ ಕಟ್ಟೆ ನಿರ್ಮಿಸಲಾಗಿದೆ ಎಂದು ತಿಳಿಸಲಾಗಿದೆ. ಬಳಿಕ ರಾತ್ರಿ ವೇಳೆ ಸಾವಿರಾರು ಜನರು ಸೇರಿ ಕಟ್ಟೆಯನ್ನು ತೆರವುಗೊಳಿಸಲು ಮುಂದಾಗಿದ್ದು, ಕೆಲಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಘೋಷಣೆಗಳನ್ನು ಕೂಗಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಎಸ್.ಪಿ. ದೀಪನ್ ಹಾಗೂ ಡಿ.ವೈ.ಎಸ್.ಪಿ. ಗಿರೀಶ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಲು ಯತ್ನಿಸಿದರೂ, ಕೆಲ ಯುವಕರು ಕಬ್ಬಿಣದ ಸಲಾಕೆ ಬಳಸಿ ಕಟ್ಟೆಯನ್ನು ಭಾಗಶಃ ತೆರವುಗೊಳಿಸಿದ ಘಟನೆ ನಡೆದಿದೆ.ಘಟನೆಯ ಬಳಿಕ ಭಟ್ಕಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಪ್ರದೇಶದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.


