ಮಂಗಳೂರು : ಸ್ಕೂಟರ್ ಚಲಾಯಿಸುತ್ತಿದ್ದ ಅಪ್ರಾಪ್ತ ಬಾಲಕನೊಬ್ಬ ಅಪಘಾತಕ್ಕೆ ಕಾರಣನೆಂದು ಆರೋಪಿಸಿ, ಸ್ಕೂಟರ್ ಮಾಲೀಕರಿಗೆ ನ್ಯಾಯಾಲಯ ದಂಡ ವಿಧಿಸಿದೆ.
ಈ ಘಟನೆ ಮಾರ್ಚ್ 30, 2025 ರಂದು ಬೆಳಗಿನ ಜಾವ 3:50 ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 66 ರ ನಂತೂರು ಪದವಿನ ಬಳಿ ಸಂಭವಿಸಿದೆ. ಅಪ್ರಾಪ್ತ ಬಾಲಕನೊಬ್ಬ ಸ್ಕೂಟರ್ ಸವಾರಿ ಮಾಡುತ್ತಿದ್ದಾಗ ಕುಂಟಿಕಾನ ಕಡೆಗೆ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಮತ್ತೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳ ಸವಾರರು ಗಾಯಗೊಂಡಿದ್ದಾರೆ.
ಘಟನೆಯ ನಂತರ, ಕದ್ರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ನಂತರ, ಪಿಎಸ್ಐ ರೋಸಮ್ಮ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿದರು. ಪ್ರಕರಣದ ವಿಚಾರಣೆ ನಡೆಸಿದ ಜೆಎಂಎಫ್ಸಿ ಎಂಟನೇ ನ್ಯಾಯಾಲಯದ ನ್ಯಾಯಾಧೀಶ ಫವಾಜ್ ಪಿ.ಎ., ಅಪ್ರಾಪ್ತ ವಯಸ್ಕನಿಗೆ ವಾಹನ ಚಲಾಯಿಸಲು ಅವಕಾಶ ನೀಡಿದ್ದಕ್ಕಾಗಿ ಸ್ಕೂಟರ್ ಮಾಲೀಕ ಅಬ್ದುಲ್ ಹಮೀದ್ಗೆ ₹25,000 ದಂಡ ವಿಧಿಸಿ ಆದೇಶಿಸಿದ್ದಾರೆ.


