ಮಂಗಳೂರು : ಭಗ್ನಪ್ರೇಮಿಯಿಂದ ನಿನ್ನೆ ಆಸಿಡ್ ದಾಳಿಗೊಳಗಾದ ಮಂಗಳೂರಿನ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಇಂದು ಭೇಟಿ ನೀಡಿ ಗಾಯಾಳುಗಳಿಗೆ ಸಾಂತ್ವನ ಹೇಳಿದರು.
ಮಂಗಳೂರಿನ ಎಜಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದರು. ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಆಸಿಡ್ ದಾಳಿಗೆ ತುತ್ತಾದ ಮೂವರು ವಿದ್ಯಾರ್ಥಿನಿಯರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದರು.
ಒಬ್ಬಳಿಗೆ ಶೇ. 20 ರಷ್ಟು, ಇನ್ನೊಬ್ಬ ವಿದ್ಯಾರ್ಥಿನಿಗೆ ಶೇ. 10 ರಷ್ಟು ಸುಟ್ಟ ಗಾಯಾಳುಗಳಾಗಿವೆ. ಇಬ್ಬರು ವಿದ್ಯಾರ್ಥಿನಿಯರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಬೇಕಾಗುತ್ತದೆ. ಇನ್ನೊಬ್ಬ ವಿದ್ಯಾರ್ಥಿನಿಗೆ ಪ್ಲಾಸ್ಟಿಕ್ ಸರ್ಜರಿ ಕುರಿತು ವೈದ್ಯರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಅಸಿಡ್ ದಾಳಿಗೆ ಒಳಗಾದ ಮೂವರು ವಿದ್ಯಾರ್ಥಿನಿಯರ ಚಿಕಿತ್ಸೆಗೆ ತಲಾ ೪ ಲಕ್ಷ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಲಾಗಿದೆ. ಒಟ್ಟು 20 ಲಕ್ಷ ಪರಿಹಾರ ನೀಡಲು ಅವಕಾಶವಿದ್ದು ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವುದರಿಂದ ಮೂವರು ವಿದ್ಯಾರ್ಥಿನಿಯರು ಆತಂಕಗೊಂಡಿದ್ದಾರೆ . ಈ ಬಗ್ಗೆ ಭಯಪಡಬೇಡಿ ಎಂದು ಆತ್ಮವಿಶ್ವಾಸ ತುಂಬಿರುವುದಾಗಿ ಚೌಧರಿ ಹೇಳಿದರು


