ಮಂಗಳೂರು : ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಶ್ರೀ ಕ್ಷೇತ್ರ ಕಾರಿಂಜೇಶ್ವರದಲ್ಲಿ ‘ಯೋಗ ವಿದ್ ಯೋಧ’ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದಕ್ಷಿಣ ಕನ್ನಡ ಸಂಸದ Captain ಬ್ರಿಜೇಶ್ ಚೌಟ ಆಹ್ವಾನ ನೀಡಿದ್ದಾರೆ.

ಜೂನ್ 21ರಂದು ಮಧ್ಯಾಹ್ನ 3 ಗಂಟೆಗೆ ಕಾರಿಂಜೇಶ್ವರ ಬೆಟ್ಟದ ಆವರಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಯೋಗಪಟು ಗೋಪಾಲಕೃಷ್ಣ ದೇಲಂಪಾಡಿ ಮಾರ್ಗದರ್ಶನ ನೀಡಲಿದ್ದಾರೆ. ವಿದ್ಯಾರ್ಥಿಗಳು, ನಿವೃತ್ತ ಯೋಧರು, ಯೋಗಾಸಕ್ತರು, ಗಣ್ಯರು ಹಾಗೂ ಸಾರ್ವಜನಿಕರು ಒಂದೇ ವೇದಿಕೆಯಲ್ಲಿ ಯೋಗಾಭ್ಯಾಸ ನಡೆಸಲಿದ್ದಾರೆ. ಈ ಬಾರಿಯ 12ನೇ ವಿಶ್ವ ಯೋಗ ದಿನದ ಧ್ಯೇಯವಾಕ್ಯ “ಆರೋಗ್ಯಕರ ವಯಸ್ಸಿಗೆ ಯೋಗ” (Yoga for Healthy Ageing) ಆಗಿದ್ದು, ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಸಂಸದರು ತಿಳಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ‘ಯೋಗ ವಿದ್ ಯೋಧ’ ಕಾರ್ಯಕ್ರಮವನ್ನು ಜಿಲ್ಲೆಯ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಲ್ಲಿ ಆಯೋಜಿಸಲಾಗುತ್ತಿದೆ. ಈ ಹಿಂದೆ ಸಸಿಹಿತ್ಲು ಹಾಗೂ ಸೋಮೇಶ್ವರ ಕಡಲ ತೀರದಲ್ಲಿ ಯಶಸ್ವಿಯಾಗಿ ಕಾರ್ಯಕ್ರಮ ನಡೆದಿದ್ದು, ಈ ಬಾರಿ ಸಮುದ್ರಮಟ್ಟದಿಂದ ಸುಮಾರು 1500 ಅಡಿ ಎತ್ತರದಲ್ಲಿರುವ ಕಾರಿಂಜ ಬೆಟ್ಟದಲ್ಲಿ ಆಯೋಜಿಸಲಾಗಿದೆ.
ಕಾರಿಂಜೇಶ್ವರ ಕ್ಷೇತ್ರದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಪ್ರಕೃತಿ ಸೌಂದರ್ಯವನ್ನು ದೇಶ-ವಿದೇಶಗಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಗಳು, ಮಾಧ್ಯಮ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕ್ಷೇತ್ರದ ವೈಭವವನ್ನು ಜಗತ್ತಿಗೆ ತಲುಪಿಸಬೇಕು ಎಂದು ಸಂಸದ ಬ್ರಿಜೇಶ್ ಚೌಟ ಮನವಿ ಮಾಡಿದ್ದಾರೆ.

