ಮಂಗಳೂರು, : ಕರಾವಳಿ ಭಾಗದಲ್ಲಿ ಮುಂದುವರಿದಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 4 (ಮಂಗಳವಾರ) ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಪವಿಭಾಗವಾರು ರಜೆ ಹೀಗಿದೆ : ಮಂಗಳೂರು ಉಪವಿಭಾಗ (ಮಂಗಳೂರು, ಉಳ್ಳಾಲ, ಮೂಡಬಿದ್ರೆ, ಬಂಟ್ವಾಳ, ಮೂಲ್ಕಿ): ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ (10ನೇ ತರಗತಿವರೆಗೆ) ರಜೆ.
ಪುತ್ತೂರು ಉಪವಿಭಾಗ (ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ): ಪಿಯುಸಿ (12ನೇ ತರಗತಿ)ವರೆಗೆ ಎಲ್ಲಾ ಶಿಕ್ಷಣ ಸಂಸ್ಥೆಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ.
ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆ–2005ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಇದೇ ವೇಳೆ, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಹಾಗೂ ಸಾರ್ವಜನಿಕರು ನದಿ, ಕೆರೆ, ಸಮುದ್ರ ತೀರಗಳಿಗೆ ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ತುರ್ತು ಸಂದರ್ಭಗಳಲ್ಲಿ 1077 ಸಹಾಯವಾಣಿಯನ್ನು ಸಂಪರ್ಕಿಸಲು ಮನವಿ ಮಾಡಲಾಗಿದೆ.

