ಮಂಗಳೂರು : ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ಸೇವೆ ನೀಡುವಂತೆ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಮತ್ತು ಶಾಶ್ವತ ಪೀಠ ಸ್ಥಾಪನೆಗೆ ಹಲವು ವರ್ಷಗಳಿಂದಲೂ ಕೇಳಿಬರುತ್ತಿದ್ದ ಬೇಡಿಕೆಗೆ ಈಗ ವೇಗ ಬಂದಿದೆ.
ಈ ಸಂಬಂಧ ಹೈ ಕೋರ್ಟ್ ಆಫ್ ಕರ್ನಾಟಕ ಮುಖ್ಯ ನ್ಯಾಯಮೂರ್ತಿಗಳಿಗೆ ಮನವರಿಕೆ ಮಾಡಲಾಗಿದ್ದು, ಅವರು ಸ್ಥಳ ಪರಿಶೀಲನೆಗೆ ಒಪ್ಪಿಕೊಂಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ ‘ಸೋಜಾ ತಿಳಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿಗಳು ಶೀಘ್ರದಲ್ಲೇ ಮಂಗಳೂರಿಗೆ ಭೇಟಿ ನೀಡಿ, ಹೈಕೋರ್ಟ್ ಪೀಠ ಸ್ಥಾಪನೆಗೆ ಸೂಕ್ತ ಸ್ಥಳಗಳ ಪರಿಶೀಲನೆ ನಡೆಸಲಿದ್ದಾರೆ.
ಸ್ಟೇಟ್ ಬ್ಯಾಂಕ್ ಸಮೀಪದ ಹಳೆಯ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಸುಮಾರು 5.5 ಎಕರೆ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕೋರ್ಟ್ ಹಾಲ್ ಹಾಗೂ ದಾಖಲೆ ಸಂಗ್ರಹಕ್ಕೆ ಅಗತ್ಯ ಮೂಲಸೌಕರ್ಯ ನೀಡಬೇಕಾಗಿದೆ. ಈ ಕಟ್ಟಡವನ್ನು ಪೀಠಕ್ಕಾಗಿ ಮೀಸಲಿಡುವಂತೆ ಸರ್ಕಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಪತ್ರ ಬರೆದಿದ್ದಾರೆ. ಇದಲ್ಲದೆ, ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಚಾರಣಾಧೀನ ಕೈದಿಗಳ ಜೈಲು ಮುಡಿಪುವಿಗೆ ಸ್ಥಳಾಂತರವಾದ ಬಳಿಕ, ಆ ಜಾಗವೂ ಲಭ್ಯವಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಒಟ್ಟಿನಲ್ಲಿ, ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಪ್ರಮುಖ ಹೆಜ್ಜೆಗಳು ಇಡಲಾಗುತ್ತಿದ್ದು, ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ನಿರೀಕ್ಷಿಸಲಾಗಿದೆ.


