ಮಂಗಳೂರು : ಮಂಗಳೂರಿನಲ್ಲಿ ಕರ್ನಾಟಕ ಹೈಕೋರ್ಟ್ನ ಸಂಚಾರಿ ಪೀಠ (Circuit Bench) ಸ್ಥಾಪಿಸುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರಿಗೆ ಪತ್ರ ಬರೆದಿದ್ದಾರೆ.
ಪ್ರಸ್ತುತ ಬೆಂಗಳೂರಿನ ಹೈಕೋರ್ಟ್ನಲ್ಲಿ ಬಾಕಿ ಇರುವ ಒಟ್ಟು ಪ್ರಕರಣಗಳಲ್ಲಿ ಸುಮಾರು 30 ಪ್ರತಿಶತ ಪ್ರಕರಣಗಳು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಸಂಬಂಧಿಸಿದವುಗಳಾಗಿವೆ ಎಂದು ಸಂಸದರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಭಾಗದ ಜನರು ನ್ಯಾಯಾಲಯದ ವ್ಯವಹಾರಗಳಿಗಾಗಿ ಸುಮಾರು 370 ಕಿಲೋಮೀಟರ್ ದೂರದ ಬೆಂಗಳೂರಿಗೆ ತೆರಳಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದು, ಇದರಿಂದ ಸಮಯ ಹಾಗೂ ಹಣದ ಭಾರ ಹೆಚ್ಚಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಮಂಗಳೂರು ಈಗ ಕರ್ನಾಟಕದ ಎರಡನೇ ಅತಿ ದೊಡ್ಡ ಆರ್ಥಿಕ ಕೇಂದ್ರವಾಗಿ ಬೆಳೆಯುತ್ತಿದ್ದು, ನ್ಯಾಯಾಂಗ ಸೇವೆಗಳ ವಿಕೇಂದ್ರೀಕರಣದ ಅಗತ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವುದು ಸಾರ್ವಜನಿಕರಿಗೆ ನ್ಯಾಯ ಸುಲಭವಾಗಿ ದೊರೆಯಲು ನೆರವಾಗಲಿದೆ ಎಂದು ಸಂಸದರು ಅಭಿಪ್ರಾಯಪಟ್ಟಿದ್ದಾರೆ.


