ಮಂಗಳೂರು : ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದ ರಾಜಕೀಯ ಬೆಳವಣಿಗೆಗಳನ್ನು ವಿರೋಧಿಸಿ ಜೆಡಿಎಸ್ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧದಲ್ಲಿ ಪ್ರತಿಭಟನಾ ಸಭೆ ನಡೆಯಿತು.
ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಎಸ್.ಎಲ್ . ಭೋಜೇಗೌಡ ಮಾತನಾಡಿ, “ಇದು ಸಾಮಾನ್ಯ ರಾಜಕೀಯ ವಿಷಯವಲ್ಲ; ದೇಶದ ಅರ್ಧ ಜನಸಂಖ್ಯೆಯ ಹಕ್ಕಿನ ಹೋರಾಟ. ಮಹಿಳಾ ಮೀಸಲಾತಿಯನ್ನು ರಾಜಕೀಯ ಲಾಭಕ್ಕಾಗಿ ತಡೆಹಿಡಿಯುವುದು ಖಂಡನೀಯ,” ಎಂದು ಹೇಳಿದರು. ಮಹಿಳಾ ಮೀಸಲಾತಿ ಜಾರಿಗೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ತಿಳಿಸಿದರು.
ಇತ್ತೀಚಿನ ಲೋಕ್ ಸಭಾ ಬೆಳವಣಿಗೆಗಳನ್ನು ಉಲ್ಲೇಖಿಸಿದ ಅವರು, ಮಹಿಳೆಯರಿಗೆ ನ್ಯಾಯ ನೀಡುವ ವಿಷಯದಲ್ಲಿ ರಾಜಕೀಯ ಭೇದಾಭಿಪ್ರಾಯಗಳನ್ನು ಬದಿಗಿಟ್ಟು ಬೆಂಬಲಿಸಬೇಕು ಎಂದರು. ಪ್ರಸ್ತುತ ಲೋಕಸಭೆಯಲ್ಲಿ ಮಹಿಳೆಯರ ಪ್ರತಿನಿಧಿತ್ವ ಕೇವಲ 14% ಇರುವುದನ್ನು ಸೂಚಿಸಿ, 33% ಮೀಸಲಾತಿ ಜಾರಿಯಾದರೆ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಲಿದೆ ಎಂದು ಅಭಿಪ್ರಾಯಪಟ್ಟರು.
ಹಾಗೆಯೇ, ಮಾಜಿ ಪ್ರಧಾನಮಂತ್ರಿ ಎಚ್. ಡಿ. ದೇವೆ ಗೌಡ ಅವರ ಕಾಲದಲ್ಲೇ 33% ಮಹಿಳಾ ಮೀಸಲಾತಿ ಮಸೂದೆ ಮಂಡನೆಯಾಗಿದ್ದುದನ್ನು ಸ್ಮರಿಸಿದರು.
ಸಭೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಹಾಗೂ ರಾಜ್ಯ ಉಪಾಧ್ಯಕ್ಷ ಎಂ.ಬಿ. ಸದಾಶಿವ ಸೇರಿದಂತೆ ಹಲವು ನಾಯಕರು ಮಾತನಾಡಿ, ಮಸೂದೆಗೆ ತಮ್ಮ ಬೆಂಬಲವನ್ನು ಪುನರುಚ್ಚರಿಸಿದರು. ಕಾರ್ಯಕ್ರಮದಲ್ಲಿ ಪಕ್ಷದ ವಿವಿಧ ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.


