ಮಂಗಳೂರು ; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಲಭ್ಯತೆಯಲ್ಲಿ ತೀವ್ರ ಕೊರತೆ ಉಂಟಾಗಿದ್ದು, ರೋಗಿಗಳನ್ನು ಪರದಾಡುವ ಸ್ಥಿತಿಗೆ ತಂದಿಟ್ಟ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತೊಮ್ಮೆ ಬಟಾಬಯಲಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಔಷಧಗಳ ಕೃತಕ ಕೊರತೆ ಸೃಷ್ಟಿಸಿ ಬಡ ರೋಗಿಗಳ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಡ ಜನರ ಆರೋಗ್ಯದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲವಾಗಿದೆ. ನಮ್ಮ ಜಿಲ್ಲೆಯಲ್ಲಿಯೂ ಅನೇಕರು ಕರೆ ಮಾಡಿ ಸಮಸ್ಯೆ ಹೇಳಿಕೊಳ್ಳುತ್ತಿದ್ದು ಸ್ಪಂದನೆ ನೀಡಬೇಕಾಗಿದ್ದ ಆರೋಗ್ಯ ಇಲಾಖೆ ಕಣ್ಣು ಮುಚ್ಚಿ ಕೂತಿರುವುದು ಬೇಜವಾಬ್ದಾರಿಯ ಪರಮಾವಧಿ. ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವರೇ ಸ್ವತಃ ಆರೋಗ್ಯ ಸಚಿವರಾಗಿದ್ದರೂ ಕೂಡಾ ಜಿಲ್ಲೆಯ ಜನತೆಗೆ ಆರೋಗ್ಯ ಭಾಗ್ಯವಿಲ್ಲದಿರುವುದು ನಮ್ಮ ದೌರ್ಭಾಗ್ಯ. ಇಂತಹ ರೋಗಪೀಡಿತ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ರಾಜ್ಯದ ಜನತೆಯೇ ತಕ್ಕ ಉತ್ತರ ನೀಡಲಿದ್ದಾರೆ ಎಂದರು.
ಸಾಮಾನ್ಯ ಜನರಿಗೆ ಉಪಯೋಗವಾಗುತ್ತಿದ್ದ ಕೇಂದ್ರದ ಜನೌಷಧಿಯನ್ನು ರಾಜಕೀಯಕ್ಕಾಗಿ ಮುಚ್ಚಲಾಯಿತು. ಸಿಟಿ ಸ್ಕ್ಯಾನ್, ಎಂಆರ್ಐ ಸ್ಕ್ಯಾನ್ ಸೇವೆಗಳು ಅಸ್ತವ್ಯಸ್ತ, ಆಂಬ್ಯುಲೆನ್ಸ್ ಸೇವೆಗಳು ಸಮಸ್ಯೆ, ವೈದ್ಯರೇ ಬೀದಿಗಿಳಿದು ಪ್ರತಿಭಟನೆ ನಡೆಸುವ ಪರಿಸ್ಥಿತಿ, ಹೀಗೆ ಸಂಪೂರ್ಣ ಆರೋಗ್ಯ ಇಲಾಖೆಯೇ ಐಸಿಯುನಲ್ಲಿದ್ದರೂ, ಕಾಂಗ್ರೆಸ್ ಸರ್ಕಾರ ಮಾತ್ರ ಸಾವಿರ ದಿನಗಳನ್ನು ಪೂರೈಸಿದ್ದೇವೆ ಎಂದು ಸಾಧನಾ ಸಮಾವೇಶ ನಡೆಸುತ್ತಿದೆ. ಅಲ್ಲದೇ, ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿ ಸರಬರಾಜಿನಲ್ಲೂ ಸ್ವಹಿತಾಸಕ್ತಿ ಹಾಗೂ ಅವ್ಯವಹಾರದ ಆರೋಪಗಳು ಕೇಳಿ ಬರುತ್ತಿದ್ದು ಕಾಂಗ್ರೆಸ್ ಸರ್ಕಾರದ ಮೇಲೆ ಜನತೆಗೆ ನಂಬಿಕೆಯೇ ಇಲ್ಲವಾಗಿದೆ ಎಂದು ಶಾಸಕರು ತೀವ್ರ ವಾಗ್ದಾಳಿ ನಡೆಸಿದರು.


