ನವದೆಹಲಿ : ಮಂಗಳೂರು ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದರು.
ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾದ ಸಂಸದರು, ಮಂಗಳೂರು ರೈಲ್ವೆ ಜಾಲವನ್ನು ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ನಿರ್ಧಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಪರವಾಗಿ ಕೃತಜ್ಞತೆ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಅಶ್ವಿನಿ ವೈಷ್ಣವ್, ಕರಾವಳಿ ಭಾಗದ ರೈಲ್ವೆ ಯೋಜನೆಗಳಿಗೆ ಮುಂದೆಯೂ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಬಳಿಕ ಪ್ರತಿಕ್ರಿಯಿಸಿದ ಕ್ಯಾ. ಚೌಟ, ಈ ಆಡಳಿತಾತ್ಮಕ ಬದಲಾವಣೆಯಿಂದ ಮಂಗಳೂರು ಭಾಗದ ರೈಲ್ವೆ ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ನಿರ್ವಹಣೆ ಮತ್ತಷ್ಟು ಪರಿಣಾಮಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರು ವಿಭಾಗದೊಂದಿಗೆ ಮಂಗಳೂರಿನ ರೈಲ್ವೆ ಸಂಪರ್ಕ ಬಲಪಡಿಸುವುದರ ಜೊತೆಗೆ, ಕರಾವಳಿ ಭಾಗದ ರೈಲ್ವೆ ಅಭಿವೃದ್ಧಿ ಮತ್ತು ಪ್ರಯಾಣಿಕರ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ದೊರೆಯುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

