ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಂಕಾಗಿರುವ ಪರಿಣಾಮ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನಲ್ಲಿ ನೀರಿನ ಮಟ್ಟ ನಿರಂತರವಾಗಿ ಕುಸಿಯುತ್ತಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್ಎಸ್ ಡ್ಯಾಂನಲ್ಲಿ ಪ್ರಸ್ತುತ ನೀರಿನ ಮಟ್ಟ 81 ಅಡಿಗೆ ಇಳಿದಿದೆ. ನೀರಿನ ಮಟ್ಟ ಕುಸಿದ ಪರಿಣಾಮ ಡ್ಯಾಂ ನಿರ್ಮಾಣದ ವೇಳೆ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಐತಿಹಾಸಿಕ ಲಕ್ಷ್ಮೀನಾರಾಯಣಸ್ವಾಮಿ ದೇವಾಲಯ ಇದೀಗ ಸಂಪೂರ್ಣವಾಗಿ ಗೋಚರಿಸುತ್ತಿದೆ. ಹಲವು ವರ್ಷಗಳ ಬಳಿಕ ದೇವಾಲಯ ಸಂಪೂರ್ಣವಾಗಿ ಕಾಣಿಸಿಕೊಂಡಿರುವುದು ಜನರ ಗಮನ ಸೆಳೆದಿದೆ.



ದೇವಾಲಯವನ್ನು ವೀಕ್ಷಿಸಲು ರಾಜ್ಯದ ವಿವಿಧ ಭಾಗಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದು, ಸ್ಥಳವು ಪ್ರವಾಸಿ ಆಕರ್ಷಣೆಯ ಕೇಂದ್ರವಾಗಿ ಮಾರ್ಪಟ್ಟಿದೆ. ಫೋಟೋಶೂಟ್ಗಳಿಗಾಗಿ ಯುವಕರು, ನವದಂಪತಿಗಳು ಹಾಗೂ ಛಾಯಾಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ.
ಒಂದೆಡೆ ಮಳೆಯ ಕೊರತೆಯಿಂದ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್ಎಸ್ ಡ್ಯಾಂ ಖಾಲಿಯಾಗುತ್ತಿರುವ ಆತಂಕ ಎದುರಾಗಿದ್ದರೆ, ಮತ್ತೊಂದೆಡೆ ಹಿನ್ನೀರಿನಲ್ಲಿ ಕಾಣಿಸಿಕೊಂಡಿರುವ ಈ ಐತಿಹಾಸಿಕ ದೇವಾಲಯ ಹೊಸ ಪ್ರವಾಸಿ ತಾಣವಾಗಿ ಜನರನ್ನು ಆಕರ್ಷಿಸುತ್ತಿದೆ.

