ಮಂಡ್ಯ : ಭೀಮನ ಅಮಾವಾಸ್ಯೆ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡದಲ್ಲಿ ನಡೆದ ಘಟನೆ ಇದೀಗ ವಿವಾದಕ್ಕೆ ಕಾರಣವಾಗಿದೆ. ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ್ಗೌಡ ಅವರ ಪುತ್ರಿ ಐಶ್ವರ್ಯ ಅವರು ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್ಐಗೆ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದ ವೇಳೆ ಐಶ್ವರ್ಯ ಅವರು ವಿಐಪಿ ಪ್ರವೇಶ ಪಡೆದಿದ್ದರು ಎನ್ನಲಾಗಿದೆ. ಬಳಿಕ ಗರ್ಭಗುಡಿ ಬಳಿ ತೆರಳಲು ಅವಕಾಶ ನೀಡುವಂತೆ ಕೇಳಿದ್ದಾರೆ. ಆದರೆ ಜನದಟ್ಟಣೆ ಹೆಚ್ಚಿರುವುದರಿಂದ ಇಂದು ಸಾಧ್ಯವಿಲ್ಲ ಎಂದು ಪಿಎಸ್ಐ ಸವಿತಾ ತಿಳಿಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಮಫ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಲ್ ಇನ್ಸ್ಪೆಕ್ಟರ್ ಲಕ್ಷ್ಮಿ ಗರ್ಭಗುಡಿ ಕಡೆ ತೆರಳಿದ್ದನ್ನು ಪ್ರಶ್ನಿಸಿದ ಐಶ್ವರ್ಯ, ತಮ್ಮನ್ನೂ ಒಳಗೆ ಬಿಡುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ಐಶ್ವರ್ಯ ಹಾಗೂ ಪಿಎಸ್ಐ ಸವಿತಾ ನಡುವೆ ವಾಗ್ವಾದ ನಡೆದಿದ್ದು, ಕೊನೆಗೆ ಐಶ್ವರ್ಯ ಅವರು ಪಿಎಸ್ಐ ಸವಿತಾ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

