ಮಂಡ್ಯ ; ಪ್ರಧಾನಿ ಮೊದಿಯವರ ಅಭಿವೃದ್ಧಿ ಕಾರ್ಯಕ್ರಮ ಗಳಿಗೆ ಮೆಚ್ಚಿ ನಾನು ಈ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮತ್ತು ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ತನಗೆ ಸಿಗುತ್ತದೆ ಎಂದು ಹಾಲಿ ಸಂಸದೆ ಸುಮಲತಾ ಅಂಬರೀಶ್ ನಿರೀಕ್ಷೆಯಲ್ಲಿದ್ದರು. ಆದರೆ ಕೊನೆ ಹಂತದಲ್ಲಿ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ತಪ್ಪಿದೆ. ಹೀಗಾಗಿ ಸುಮಲತಾ ಅಂಬರೀಶ್ ಅವರ ಮುಂದಿನ ನಡೆ ಏನು ಎಂಬುವುದು ಯಕ್ಷ ಪ್ರಶ್ನೆಯಾಗಿತ್ತು. ಈ ಪ್ರಶ್ನೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ನೀವು ಬೇರೆ ಯಾವುದೆ ನಿರ್ಧಾರ ತೆಗೆದುಕೊಳ್ಳಬೇಡಿ ಅಂತ ಸ್ವತಃ ಪ್ರಧಾನಿ ಮೋದಿಯವರು ನನಗೆ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಸಂಸದೆ ಸ್ಥಾನ ಶಾಶ್ವತವಲ್ಲ. ಮತ್ತೊಬ್ಬರು ಸಂಸದರಾಗಿ ಬರುತ್ತಾರೆ. ಆದರೆ ನಾನು ಮಂಡ್ಯದ ಸೊಸೆಯಾಗಿ ಕೊನೆಯವರೆಗೂ ಉಳಿಯುತ್ತೇನೆ. ಬದಲಾದ ಪರಿಸ್ಥಿತಿ, ಸನ್ನಿವೇಶವನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಹಠ ಸಾಧನೆ ಮಾಡುವ ಉದ್ದೇಶ ಇದ್ದರೇ ಪಕ್ಷೇತರ ಸ್ಪರ್ಧೆ ಮಾಡಬಹುದು. ಅದರಿಂದ ಯಾರಿಗೆ ಲಾಭ? ನನ್ನ ಸ್ವಾರ್ಥ ಏನು ಇಲ್ಲ, ಲಾಭಕ್ಕಾಗಿ ಯೋಚಿಸಿದರೇ ಬೇರೆ ಕ್ಷೇತ್ರ ಆಯ್ಕೆ ಮಾಡಬಹುದಿತ್ತು. ಬಂದ ಅವಕಾಶಗಳನ್ನು ಮಂಡ್ಯಕ್ಕಾಗಿ ಬಿಟ್ಟಿದ್ದೇನೆ. ರಾಜಕೀಯ ಮಾಡಿದರೇ ಮಂಡ್ಯದಲ್ಲಿ ಮಾತ್ರ ಅಂತ ನಿರ್ಧಾರ ಮಾಡಿದ್ದೇನೆ. ಅಸಂಖ್ಯಾತ ಅಂಬರೀಶ್ ಅಭಿಮಾನಿಗಳನ್ನ ಬಿಟ್ಟು ಹೋದರೆ ಮಂಡ್ಯ ಸೊಸೆ ಅನಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.


