ಮೈಸೂರು : ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಬೂದಳ್ಳಿ ಗ್ರಾಮದಲ್ಲಿ ಇಟ್ಟಿಗೆಗೂಡು ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಮೃತರನ್ನು ಬೂದಳ್ಳಿ ಗ್ರಾಮದ ರಾಜೇಶ್ (32), ನಾಗರಾಜು (35) ಮತ್ತು ನಾರಾಯಣ್ (40) ಎಂದು ಗುರುತಿಸಲಾಗಿದೆ. ಇವರು ಇಟ್ಟಿಗೆಗೂಡಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ, ಇಟ್ಟಿಗೆಗೂಡನ್ನು ತೆರವುಗೊಳಿಸುವ ಸಂದರ್ಭದಲ್ಲಿ ಏಕಾಏಕಿ ಗೂಡು ಕುಸಿದು ಮೂವರೂ ಅದರಡಿ ಸಿಲುಕಿದ್ದಾರೆ.
ಸ್ಥಳೀಯರು ರಕ್ಷಣೆಗೆ ಮುಂದಾದರೂ, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳದಲ್ಲೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಇಟ್ಟಿಗೆಗೂಡು ಬೂದಳ್ಳಿ ಗ್ರಾಮದ ಸಿದ್ದರಾಜು ಅವರಿಗೆ ಸೇರಿದ್ದು, ಘಟನಾ ಸ್ಥಳಕ್ಕೆ ಟಿ. ನರಸೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.


