ವಯನಾಡು : ಇತ್ತೀಚೆಗೆ ಕೇರಳದ ವಯನಾಡಿನಲ್ಲಿ ಭೂಕುಸಿತ ಸಂಭವಿಸಿದ್ದ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಂದು ಭೇಟಿ ನೀಡಿದ್ದಾರೆ. ವಿಪತ್ತು ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿರುವ ಪ್ರಧಾನಿ, ಸರ್ಕಾರ ಕೈಗೊಂಡ ಪರಿಹಾರ ಮತ್ತು ಪುನರ್ವಸತಿ ಕ್ರಮಗಳ ಕುರಿತು ಪರಿಶೀಲಿಸಿದ್ದಾರೆ.

ಇದಕ್ಕೂ ಮುನ್ನ ಬೆಳಗ್ಗೆ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರನ್ನು, ಕೇರಳ ಸಿಎಂ ಪಿಣರಾಯಿ ವಿಜಯನ್ ಸರಳ, ಸಾಂಪ್ರದಾಯಿಕವಾಗಿ ಕೈಮುಗಿದು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕೇಂದ್ರ ಪ್ರವಾಸೋದ್ಯಮ ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಉಪಸ್ಥಿತರಿದ್ದರು. ಸ್ವಾಗತ ಸ್ವೀಕರಿಸಿ ಬಳಿಕ ಮೋದಿ, ಸಿಎಂ ಜೊತೆಗೂಡಿ ವೈಮಾನಿಕ ಸಮೀಕ್ಷೆ ನಡೆಸಿದರು.

“ನಾನು ಘಟನೆಯ ಬಗ್ಗೆ ತಿಳಿದ ಸಮಯದಿಂದಲೂ ನಾನು ಭೂಕುಸಿತದ ಬಗ್ಗೆ ಮಾಹಿತಿಯನ್ನು ತೆಗೆದುಕೊಳ್ಳುತ್ತಿದ್ದೇನೆ. ದುರಂತದಲ್ಲಿ ಸಹಾಯ ಮಾಡಬಹುದಾದ ಕೇಂದ್ರ ಸರ್ಕಾರದ ಎಲ್ಲಾ ಏಜೆನ್ಸಿಗಳನ್ನು ತಕ್ಷಣವೇ ಸಜ್ಜುಗೊಳಿಸಲಾಗಿದೆ ”ಎಂದು 390 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಭೂಕುಸಿತದ ಸಂತ್ರಸ್ತರ ರಕ್ಷಣೆ ಮತ್ತು ಪುನರ್ವಸತಿ ಪ್ರಯತ್ನಗಳನ್ನು ಪರಿಶೀಲಿಸುವ ಸಭೆಯಲ್ಲಿ ಪ್ರಧಾನಿ ಹೇಳಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಯನಾಡಿನಲ್ಲಿ ಭೂಕುಸಿತದಿಂದ ಸಂತ್ರಸ್ತರು ಮತ್ತು ಬದುಕುಳಿದವರನ್ನು ಭೇಟಿ ಮಾಡಲು ಮತ್ತು ಸಂವಾದ ನಡೆಸಲು ಪರಿಹಾರ ಶಿಬಿರಕ್ಕೆ ಭೇಟಿ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಯನಾಡಿನಲ್ಲಿ ಭೂಕುಸಿತದಿಂದ ಸಂತ್ರಸ್ತರು ಮತ್ತು ಬದುಕುಳಿದವರನ್ನು ಭೇಟಿ ಮಾಡಲು ಮತ್ತು ಸಂವಾದ ನಡೆಸಲು ಪರಿಹಾರ ಶಿಬಿರಕ್ಕೆ ಭೇಟಿ ನೀಡಿದರು.
“ಈ ಅನಾಹುತ ಸಾಮಾನ್ಯವಲ್ಲ. ಸಾವಿರಾರು ಕುಟುಂಬಗಳ ಕನಸುಗಳು ಭಗ್ನಗೊಂಡಿವೆ. ನಾನು ಸ್ಥಳದಲ್ಲೇ ಪರಿಸ್ಥಿತಿಯನ್ನು ನೋಡಿದ್ದೇನೆ. ಈ ದುರಂತವನ್ನು ಎದುರಿಸಿದ ಸಂತ್ರಸ್ತರನ್ನು ಪರಿಹಾರ ಶಿಬಿರಗಳಲ್ಲಿ ಭೇಟಿ ಮಾಡಿದ್ದೇನೆ. ನಾನು ಆಸ್ಪತ್ರೆಯಲ್ಲಿ ಗಾಯಗೊಂಡ ರೋಗಿಗಳನ್ನು ಭೇಟಿ ಮಾಡಿದ್ದೇನೆ” ಎಂದು ಅವರು ಹೇಳಿದರು.

ಪರಿಶೀಲನಾ ಸಭೆಯಲ್ಲಿ, ಪುನರ್ವಸತಿಯಲ್ಲಿ ರಾಜ್ಯಕ್ಕೆ ಎಲ್ಲಾ ಬೆಂಬಲ ನೀಡುವುದಾಗಿ ಮೋದಿ ಭರವಸೆ ನೀಡಿದರು. ರಾಜ್ಯ ಸರ್ಕಾರದ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಕೇಂದ್ರವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ ಎಂದು ಪ್ರಧಾನಿ ಹೇಳಿದರು.

ಜು.30 ರಂದು ವಯನಾಡಲ್ಲಿ ಭೂಕುಸಿತ ಸಂಭವಿಸಿದ ನಂತರ ಕನಿಷ್ಠ ೩೮೦ ಜನರು ಸಾವನ್ನಪ್ಪಿದ್ದರು. ಅನೇಕರು ಈ ದುರಂತದಲ್ಲಿ ನಾಪತ್ತೆಯಾಗಿದ್ದಾರೆ. ಇದು ಕೇರಳಕ್ಕೆ ಅಪ್ಪಳಿಸಿದ ಅತಿದೊಡ್ಡ ನೈಸರ್ಗಿಕ ವಿಕೋಪಗಳಲ್ಲಿ ಒಂದಾಗಿದೆ. ವಿಪತ್ತು ಪೀಡಿತ ಪ್ರದೇಶಗಳಿಗೆ ಪುನರ್ವಸತಿ ಹಾಗೂ ಪರಿಹಾರ ಕಲ್ಪಿಸಿಕೊಡಲು ಕೇರಳ ಸರ್ಕಾರ, ಕೇಂದ್ರದ ಬಳಿ 2,000 ಕೋಟಿ ರೂ. ನೆರವು ನೀಡುವಂತೆ ಮನವಿ ಮಾಡಿತ್ತು. ಈ ಬೆನ್ನಲ್ಲೇ ಖುದ್ದು ಪ್ರಧಾನಿ ಅವರೇ ಭೇಟಿ ನೀಡಿ ವಿಪತ್ತು ಪೀಡಿತ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿದ್ದಾರೆ.


